ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (ಸಂಬಂಧಿಸಿದಂತೆ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 8 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಇಡಿ ಇಂದು (ಡಿ. 19) ತಿಳಿಸಿದೆ. ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ನಾಲ್ಕು ವಸತಿ ಮತ್ತು ವಾಣಿಜ್ಯ ಆಸ್ತಿ ಹಾಗೂ ಒಂದು ಕಟ್ಟಡ ಸೇರಿವೆ. ಇಡಿ ಪ್ರಕಾರ, ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಮೌಲ್ಯ 8.07 ಕೋಟಿ ರೂ. ಆಗಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ಗಳ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಆಸ್ತಿಗಳನ್ನು PMLA ಅಡಿಯಲ್ಲಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ.
ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ.




