ತುಮಕೂರು: ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸುಮಾರು 2259 ಕೋಟಿ ವೆಚ್ಚದ ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಈ ಭಾಗದ ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುತ್ತಾ ಆರೋಗ್ಯದ ತೊಂದರೆಗಳಿಗೆ ಒಳಗಾಗುತ್ತಿದ್ದರು. ಅಂಗವೈಕಲ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಜನರನ್ನು ಸಮಸ್ಯೆಯಿಂದ ದೂರವಿರಿಸಲು ಸುಮಾರು 200 ಕಿ.ಮೀ. ನಷ್ಟು ದೂರವಿರುವ ತುಂಗಭದ್ರಾ ಜಲಾಶಯದ ಹಿನ್ನೀರನ್ನು ಪಾವಗಡಕ್ಕೆ ತರುವ ಯೋಜನೆಯ ಅನುಷ್ಟಾನಕ್ಕೆ ಸರ್ಕಾರದೊಡನೆ ದುಡಿದ ಸಚಿವರು, ಶಾಸಕರ ಪ್ರಯತ್ನ ಇಂದು ಫಲಿಸಿದೆ. ಪಾವಗಡ ತಾಲ್ಲೂಕಿನ 270 ಹಳ್ಳಿಗಳಿಗೆ ಮತ್ತು ಪಾವಗಡ ಪಟ್ಟಣಕ್ಕೆ ಈ ಯೋಜನೆಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. 2050 ರವರೆಗೆ ಈ ಯೋಜನೆಯ ಲಾಭವನ್ನು ಜನರು ಪಡೆಯಬಹುದಾಗಿದೆ. ಈ ಯೋಜನೆಯಿಂದ ಸುಮಾರು 17.50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿದಂತಾಗುತ್ತದೆ.ಕಳೆದ ಅವಧಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದಿದ್ದರೇ, ಈ ಯೋಜನೆಯನ್ನು ಮೂರು ವರ್ಷಗಳ ಮುಂಚೆಯೇ ಪೂರ್ಣಗೊಳಿಸಬಹುದಾಗಿತ್ತು ಎಂದರು.

ಪಾವಗಡದಲ್ಲಿ ವಿದ್ಯುತ್ ಉತ್ಪಾದನೆ ಪ್ಲಾಂಟ್ ಏಷ್ಯಾದಲ್ಲೇ ನಂ.1 ಆಗಿದೆ. ಈಗಾಗಲೇ 2050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಮುಂದಿನ ಎರಡು ತಿಂಗಳಲ್ಲಿ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಇದರಿಂದ ಪಾವಗಡದ ಚಿತ್ರಣವೇ ಬದಲಾಗಲಿದೆ ಎಂದರು. ನಂಜುಂಡಪ್ಪ ವರದಿಯಲ್ಲಿ ಪಾವಗಡವನ್ನು ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟಿತ್ತು. ಈಗ ತುಮಕೂರು ಜಿಲ್ಲೆಯ ತಾಲ್ಲೂಕಿನ ಪಟ್ಟಿಯಲ್ಲಿ ಅಭಿವೃದ್ದಿಯಲ್ಲಿ ಪಾವಗಡ ಮೊದಲನೇ ಸ್ಥಾನದಲ್ಲಿದ್ದು, ಈ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದರು.
ರಾಜ್ಯದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರಿಂದ ಇಂತಹ ಒಂದು ಉತ್ತಮ ಯೋಜನೆ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಆದರೆ ಜನಪರ, ರೈತಪರವಾದ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವಲ್ಲಿ ಬಿಜೆಪಿಯವರು ಸಿದ್ದಹಸ್ತರಾಗಿದ್ದಾರೆ. ರಾಜ್ಯದ ಜನರನ್ನು ತಪ್ಪುದಾರಿಗೆ ಎಳೆಯುವಲ್ಲಿ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದರು. ಗ್ಯಾರಂಟಿ ಯೋಜನೆಯಿಂದ ರಾಜ್ಯದ ಲಕ್ಷಾಂತರ ಕುಟುಂಬಕ್ಕೆ ಅನುಕೂಲವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೊಳಿಸಿದ್ದ ಶಕ್ತಿ ಯೋಜನೆಯಲ್ಲಿ ಇದುವರೆಗೆ ಸುಮಾರು 500 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆದಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ 1.64 ಕೋಟಿ ಕುಟುಂಬಗಳು ಲಾಭ ಪಡೆಯುತ್ತಿದೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ನೀಡಿ, ರಾಜ್ಯ ಹಸಿವು ಮುಕ್ತವಾಗಬೇಕೆನ್ನುವುದು ನಮ್ಮ ಸರ್ಕಾರದ ಗುರಿಯಾಗಿದೆ. ಆದರೆ ಬಿಜೆಪಿಯವರ ಸಾಧನೆ ಏನು? ರಾಜ್ಯಕ್ಕೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಕರ್ನಾಟಕದಿಂದ ಪ್ರತಿ ವರ್ಷ 4.50 ಲಕ್ಷ ಕೋಟಿ ತೆರಿಗೆ ಕೇಂದ್ರ ಸರ್ಕಾರಕ್ಕೆ ತಲುಪುತ್ತಿದ್ದು, ಅದರಲ್ಲಿ ಕೇವಲ 65 ಸಾವಿರ ಕೋಟಿ ರೂ. ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಇದನ್ನು ಯಾವುದೇ ಜೆಡಿಎಸ್ ಹಾಗೂ ಬಿಜೆಪಿ ಸಂಸದರು ಕೇಂದ್ರವನ್ನು ಪ್ರಶ್ನಿಸುತ್ತಿಲ್ಲ. ಕಳೆದ ವಿಧಾನಸಭೆ ಚುನಾಣೆಯಲ್ಲಿ 136 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದ ಪರಿಣಾಮ, ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಹೊಂದಿ ಲೋಕಸಭಾ ಚುನಾವಣೆಯನ್ನು ಎದುರಿಸುವ ದುಸ್ಥಿತಿ ಬಂತು. ಜಿಡಿಎಸ್ ನವರ ಶಕ್ತಿ ಕರ್ನಾಟಕದಲ್ಲಿ ಕುಂದುತ್ತಿದೆ. 2004 ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ, ಜೆಡಿಎಸ್ ಪಕ್ಷ ೫೯ ಸ್ಥಾನಗಳನ್ನು ಗೆದ್ದಿತ್ತು, ಆದ್ರೆ ಹಿಂದಿನ ಚುನಾವಣೆಯಲ್ಲಿ ಅವರು ಕೇವಲ 18 ಸ್ಥಾನಗಳನ್ನು ಗೆದ್ದರು. ಪಾವಗಡ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ನವರ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್ ಅನ್ನು ಕಂಗೆಡಿಸಿದೆ ಎಂದರು.
ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ವಿವರಿಸಿದ ಮುಖ್ಯಮಂತ್ರಿಗಳು, ಕರ್ನಾಟಕಕ್ಕೆ 14 ನೇ ಹಣಕಾಸು ಆಯೋಗದಲ್ಲಿ 4.7% ಕೊಡುತ್ತಿದ್ದ ಅನುದಾನದಲ್ಲಿ 15 ನೇ ಹಣಕಾಸಿನ ಆಯೋಗದಲ್ಲಿ 3.6% ಗೆ ಇಳಿಸಿದರು. 1.15% ಅನುದಾನ ಕಡಿಮೆಯಾಗಿದೆ. 68000 ಕೋಟಿ ರೂ.ಗಳ ನಷ್ಟವಾಗಿದೆ. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರತಿಪಕ್ಷಗಳಿಗೆ ಗೌರವ ಇದ್ದಿದ್ದರೆ ಜನತೆಗೆ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿರಲಿಲ್ಲ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನವಿಲ್ಲ ಎನ್ನುತ್ತಾರೆ. 2529 ಕೋಟಿ ರೂ ವೆಚ್ಚದ ಕುಡಿಯುವ ನೀರಿನ ಯೋಜನೆ, 716 ಕೋಟಿ ರೂ.ಗಳ ಅಭಿವೃದ್ಧಿಗೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿದೆ. ಇದು ಅಭಿವೃದ್ಧಿಯಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಬಿಜೆಪಿಯವರು ಸುಳ್ಳಿನ ಸರದಾರರು. ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳೇ ಅವರ ಮನೆ ದೇವರು. ಅವರ ಮಾತುಗಳನ್ನು ನಂಬಬೇಡಿ. ಕಾಂಗ್ರೆಸ್ ಪಕ್ಷ ಮಾತ್ರ ಈ ರಾಜ್ಯದ ದಲಿತರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು ಹಾಗೂ ಕಾರ್ಮಿಕರ ಪರವಾಗಿದೆ. ನಮ್ಮ ಸರ್ಕಾರ ಒಂದು ಧರ್ಮದ ಪರವಾಗಿ ಯೋಜನೆ ಘೋಷಿಸಿಲ್ಲ. ಅಕ್ಕಿ, ವಿದ್ಯುತ್, ಶಕ್ತಿ, ಯೋಜನೆಯನ್ನು ಎಲ್ಲಾ ಜಾತಿ, ಧರ್ಮ, ಬಿಜೆಪಿಯ ಬಡವರಿಗೂ ನೀಡಲಾಗಿದೆ. ಒಂದು ಪಕ್ಷಕ್ಕೆ, ಒಂದು ಜಾತಿ, ಧರ್ಮಕ್ಕೆ ನೀಡಿಲ್ಲ. ರಾಜ್ಯ ಸರ್ವತೋಮುಖ ಅಭಿವೃದ್ಧಿಯಾಗಬೇಕು. ಹಿಂದುಳಿದ ತಾಲ್ಲೂಕುಗಳು ಮುಂದುವರೆಯಲು ಈ ಎಲ್ಲಾ ಕಾರ್ಯಕ್ರಮಗಳಿಂದ ಸಾಧ್ಯವಾಗಿದೆ. ಕರ್ನಾಟಕದ 240 ತಾಲ್ಲೂಕು, 224 ವಿಧಾನಸಭಾ ಕ್ಷೇತ್ರಗಳಿಗೆ ಎಲ್ಲಾ ಕಾರ್ಯಕ್ರಮಗಳನ್ನು ಒದಗಿಸಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 5300 ಕೋಟಿ ರೂ.ಗಳ ಒದಗಿಸುವುದಾಗಿ ಘೋಷಣೆ ಮಾಡಿದ್ದರೂ ಇಲ್ಲಿಯವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ಎತ್ತಿನಹೊಳೆ ಯೋಜನೆಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು, 23 ಕೆರೆಗಳಿಗೆ ಸಣ್ಣ ನೀರಾವರಿ ಇಲಾಖೆ ಮೂಲಕ ನೀರು ತುಂಬಿಸುವ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನ ಮಾಡುವುದಾಗಿ ಭರವಸೆ ನೀಡಿದರು.
2028 ರಲ್ಲಿಯೂ ನಾವೇ (ಕಾಂಗ್ರೆಸ್ ಪಕ್ಷವೇ) ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಚರ್ಚೆಗೆ ಕರೆದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣೆ ಮಾಡುವಂತೆ ಹೇಳುತ್ತಾರೆ. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಅಧಿಕಾರದಲ್ಲಿ ಇರಲಿದೆ. ಚುನಾವಣೆಗೆ ನಾವು ಹೆದರುವುದಿಲ್ಲ. ವಿಜಯೇಂದ್ರ ಕುರ್ಚಿ ಅಲ್ಲಾಡುತ್ತಿದ್ದು, 2028 ರವರೆಗೆ ಬಿಜೆಪಿ ಅಧ್ಯಕ್ಷ ಸ್ಥಾನದ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ತಿಳಿದಿಲ್ಲ ಎಂದ ಅವರು, ನಾಳೆ ಚುನಾವಣೆಯಾದರೂ ನಾವು ಗೆದ್ದೆ ಗೆಲ್ಲುತ್ತೇವೆ. ಆದರೆ ಜನ ನಮಗೆ 2028 ರ ಮೇ ತಿಂಗಳವರೆಗೆ ಅಧಿಕಾರ ನೀಡಿದ್ದಾರೆ. ಅದರಂತೆ ಅಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರೆಯುತ್ತೇವೆ. 2028 ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ, ಜೆಡಿಎಸ್ ಅನ್ನು ಸೋಲಿಸಿ ಪುನಃ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣದ ಘೋಷಣೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ನಂತರ ಸರ್ಕಾರಿ ಇಲಾಖೆಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. ಪಾವಗಡ ಶಾಸಕ ವೆಂಕಟೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗೃಹ ಸಚಿವ ಡಾ .ಜಿ ಪರಮೇಶ್ವರ್, ಲೋಕಸಭಾ ಸದಸ್ಯ ಗೋವಿಂದ ಕಾರಜೋಳ, ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಮಾಜಕಲ್ಯಾಣ ಇಲಾಖೆಯ ಸಚಿವ ಎಚ್.ಸಿ.ಮಹದೇವಪ್ಪ, ಚಳ್ಳಕೆರೆ ಶಾಸಕ ರಘು ಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ, ಶ್ರೀನಿವಾಸ್, ಮಾಜಿ ಸಚಿವ ವೆಂಕಟರಮಣಪ್ಪ, ಪುರಸಭೆ ಅಧ್ಯಕ್ಷ ಸುದೇಶ್ ಬಾಬು, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಓ ಪ್ರಭು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ ಹಾಜರಿದ್ದರು.
ವರದಿ: ಗಿರೀಶ್ ಕೆ ಭಟ್, ತುರುವೇಕೆರೆ




