ರಾಯಬಾಗ: ತಾಲ್ಲೂಕು ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಬುಧವಾರ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಉದ್ಯೋಗ ವಾಹಿನಿ ಜಾಗೃತಿ ವಾಹಿನಿಗೆ ತಾಪಂ ಸಹಾಯಕ ನಿರ್ದೇಶಕ (ಪಂರಾ) ವಾಸುದೇವ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆಯ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಉದ್ಯೋಗ ವಾಹಿನಿಗೆ ಚಾಲನೆ ನೀಡಲಾಗಿದ್ದು, ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಜತೆಗೆ 2025-26ನೇ ಸಾಲಿನ ವಾರ್ಷಿಕ ಆಯವ್ಯಯ ತಯಾರಿಸಲು ಬೇಡಿಕೆಗಳನ್ನು ಕೂಡ ಸಲ್ಲಿಸಬಹುದು ಎಂದು ತಿಳಿಸಿದರು.
ಇದೇ ವೇಳೆ ಉದ್ಯೋಗ ಖಾತರಿ ಯೋಜನೆಯ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿಗಳ ಮಾಹಿತಿಯುಳ್ಳ ಕರಪತ್ರಗಳನ್ನು ತಾಪಂ ಸಹಾಯಕ ನಿರ್ದೇಶಕ (ಪಂರಾ) ವಾಸುದೇವ್ ಅವರು ಬಿಡುಗಡೆಗೊಳಿಸಿದರು.
ಸಹಾಯಕ ನಿರ್ದೇಶಕರು (ಗ್ರಾಉ), ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಐಇಸಿ ಸಂಯೋಜಕರು, ಎಂಐಎಸ್ ಸಂಯೋಜಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಮ ಕಾಯಕ ಮಿತ್ರರು, ಬಿಎಫ್ ಟಿ ಹಾಗೂ ತಾಪಂ ಸಿಬ್ಬಂದಿ ಉಪಸ್ಥಿತರಿದ್ದರು.