ಚಿತ್ರದುರ್ಗ: ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ವರ್ಷಕ್ಕೆ ರೂ.8 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುವವರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದ್ದು, ಇದರಿಂದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ.
ಪೇಟಿಎಂ, ಫೋನ್ ಪೇ ಮೂಲಕ ಸಣ್ಣಪುಟ್ಟ ವ್ಯಾಪಾರಸ್ಥರು ಸಹ ಹಣ ಪಾವತಿ ಪಡೆಯುವುದರಿಂದ ವರ್ಷಕ್ಕೆ ಅವರ ವಹಿವಾಟು ರೂ.8 ಲಕ್ಷ ಮೀರುತ್ತದೆ.
ಬಹಳ ಕಡಿಮೆ ಲಾಭದೊಂದಿಗೆ ವ್ಯವಹರಿಸುವ ಇವರಿಗೆ ಬಿಪಿಎಲ್ ಕಾರ್ಡು ರದ್ದತಿಯಿಂದ ತೊಂದರೆಯಾಗುತ್ತಿದೆ. ಈ ಕುರಿತು ಆಯೋಗ ಹೆಚ್ಚಿನ ಗಮನ ಹರಿಸಿದ್ದು, ನಿಯಮಗಳಿಗೆ ಸೂಕ್ತ ಮಾರ್ಪಾಡುಗಳನ್ನು ತರಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ತಿಳಿಸಿದರು.
ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಾಗಿದೆ. ಡಿ.31 ರಂದು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಆಯೋಗ ವಾಸ್ತವ್ಯ ಇರಲಿದ್ದು, ಜಿಲ್ಲೆಯ ಪಡಿತರ ವಿತರಣೆ, ಅಂಗನವಾಡಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿನ ಆಹಾರ ಸರಬರಾಜು ಕುರಿತು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಆಯೋಗಕ್ಕೆ ನೇರವಾಗಿ ದೂರು ಸಲ್ಲಿಸಬಹುದು ಎಂದು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಭೇಟಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಸರ್ಕಾರ 14 ಇಲಾಖೆಗಳ ವ್ಯಾಪ್ತಿಗೆ ಬರುವಂತಹ ಆಹಾರ ವಿತರಣೆ ಹಾಗೂ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಆಯೋಗ ಮೇಲ್ವಿಚಾರಣೆ ನಡೆಸಿ ಸಮಸ್ಯೆಗಳನ್ನು ಪರಿಹರಿಸುತ್ತಿದೆ.
ದುರ್ಬಲ ವರ್ಗದ ಜನರಿಗೆ ದೊರಕಬೇಕಾದ ಆಹಾರದ ಹಕ್ಕನ್ನು ಸಂರಕ್ಷಿಸಲಾಗುತ್ತಿದೆ. ಸಾರ್ವಜನಿಕರಿಂದ ಕೇಳಿ ಬಂದ ದೂರುಗಳ ಆಧಾರದಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಆಯೋಗದಿಂದ ಪ್ರವಾಸ ಕೈಗೊಳ್ಳಲಾಗುತ್ತಿದೆ.
ಆಯೋಗ ಭೇಟಿ ನೀಡುವ ಜಿಲ್ಲೆಯ ಬಗ್ಗೆ ಮೊದಲೇ ಮಾಹಿತಿ ನೀಡಿದರೆ, ಅಧಿಕಾರಿಗಳು ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಮುಚ್ಚಿಡುವ ಸಂಭವವಿರುತ್ತದೆ. ಈ ಹಿನ್ನಲೆಯಲ್ಲಿ ಅಧಿಕೃತವಾಗಿ ಮಾಹಿತಿ ನೀಡದೆ ಪ್ರವಾಸ ಕೈಗೊಂಡು ಸಮಸ್ಯೆಗಳನ್ನು ಗುರುತಿಸಿ, ಲೋಪ, ಭ್ರಷ್ಟಾಚಾರ ಕಂಡುಬಂದರೆ ಸಂಬಂದಪಟ್ಟ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ತಿಳಿಸಿದರು.




