ಜೊಯಿಡಾ: ಧಾರವಾಡ ನಗರದ ಕಮಲಾಪುರದ 4ನೇ ಶಾಲೆಯಿಂದ ಶುಕ್ರವಾರ ಮಧ್ಯಾಹ್ನ ಅಪಹರಣಕ್ಕೊಳಗಾಗಿದ್ದ ಇಬ್ಬರು ವಿದ್ಯಾರ್ಥಿಗಳು ಸೋಮವಾರ ಜೋಯಿಡಾ ಹತ್ತಿರ ನಾಗೋಡಾ ತಿರುವಿನಲ್ಲಿ ಬೈಕ್ ಅಪಘಾತಕ್ಕಿಡಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸಿಪಿಐ ಚಂದ್ರಶೇಖರ ಹರಿಹರ ಮಾಹಿತಿ ನೀಡಿದ್ದಾರೆ.
ಕಮಲಾಪುರದ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಲಕ್ಷ್ಮೀ ಕರಿಯಪ್ಪನವರ ಹಾಗೂ ತನ್ವೀರ್ ದೊಡಮನಿ ಎಂಬ ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ಸಮಯದಲ್ಲಿ ಶಾಲೆಯಿಂದ ಹೊರಬಂದಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮಕ್ಕಳನ್ನು ಪುಸಲಾಯಿಸಿ ತನ್ನ ಬೈಕ್ ಮೇಲೆ ಕುಳ್ಳಿರಿಸಿಕೊಂಡು ಪರಾರಿಯಾಗಿದ್ದನು. ಈ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯಿಂದ ಕಮಲಾಪುರ ಭಾಗದಲ್ಲಿ ತೀವ್ರ ಆತಂಕ ಮೂಡಿತ್ತು.

ಮಕ್ಕಳನ್ನು ಅಪಹರಿಸಿ ಜೊಯಿಡಾ ಮಾರ್ಗವಾಗಿ ಕರೆದೊಯ್ಯುತ್ತಿದ್ದಾಗ, ಆರೋಪಿಯ ಬೈಕ್ ಜೋಯಿಡಾ ಬಳಿಯ ನಾಗೋಡಾ ಕ್ರಾಸ್ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಇದರಿಂದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ಓಡಿ ಬಂದು ಮಕ್ಕಳ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಕ್ಕಳು ತಾವು ಧಾರವಾಡದವರೆಂದು ತಿಳಿಸಿದ್ದಾರೆ. ಅನುಮಾನಗೊಂಡ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಜೊಯಿಡಾ ಪೊಲೀಸರು ಮಕ್ಕಳನ್ನು ಸುಪರ್ದಿಗೆ ಪಡೆದಿದ್ದಾರೆ . ಆರೋಪಿ ಸವಾರನನ್ನು ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಲಾಗುತ್ತಿದೆ. ಮಕ್ಕಳನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ. ಸದ್ಯ ಮಕ್ಕಳು ಅಪಾಯದಿಂದ ಪಾರಾಗಿದ್ದು, ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.




