ಚೇಳೂರು: ನೂತನ ತಾಲೂಕಾಗಿ ಹೊರಹೊಮ್ಮಿದ ನಂತರ ಇಲ್ಲಿನ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕರು ತಿಳಿಸಿದರು.
ಮಂಗಳವಾರ ಇಲ್ಲಿನ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮುಖ್ಯವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪೋಡಿ, ದರಖಾಸ್ತು ಮತ್ತು ವಸತಿ ಯೋಜನೆಗಳಿಗೆ ಸಂಬಂಧಿಸಿದ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಚೇಳೂರು ಮತ್ತು ಬಾಗೇಪಲ್ಲಿ ಭಾಗಗಳಲ್ಲಿ ಗ್ರಾಮಗಳ ಹೆಸರುಗಳು ಒಂದೇ ರೀತಿ ಇರುವುದರಿಂದ ತಾಂತ್ರಿಕವಾಗಿ ಕೆಲವು ಸಮಸ್ಯೆಗಳಾಗುತ್ತಿವೆ.
ಇದರಿಂದ ಕಂದಾಯ ದಾಖಲೆಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ. ಇನ್ನು ಒಂದು ತಿಂಗಳೊಳಗೆ ದರಖಾಸ್ತು ಸಮಿತಿ ಸಭೆ ನಡೆಸಿ, ಬಾಕಿ ಇರುವ ಸುಮಾರು 765 ಫೈಲ್ಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ ಎಂದು ಶಾಸಕರು ವಿವರಿಸಿದರು.
ಮಿನಿ ವಿಧಾನಸೌಧಕ್ಕೆ ಶೀಘ್ರ ಚಾಲನೆ:
ನೂತನ ತಾಲೂಕಿಗೆ ಮಿನಿ ವಿಧಾನಸೌಧ ಮಂಜೂರಾಗಿದ್ದು, ಶೀಘ್ರದಲ್ಲೇ ಭೂಮಿ ಪೂಜೆ ನೆರವೇರಿಸಲಾಗುವುದು. ಹಣಕಾಸಿನ ಇಲಾಖೆಯಿಂದ ಅನುದಾನ ಬಿಡುಗಡೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇ.ಓ ಕಚೇರಿ ಸೇರಿದಂತೆ ವಿವಿಧ ಇಲಾಖಾ ಕಚೇರಿಗಳ ಸ್ಥಾಪನೆಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಧಿಕಾರಿಗಳಿಗೆ ತಹಸೀಲ್ದಾರ್ ಕಡಕ್ ಸೂಚನೆ:
ಕಾರ್ಯಕ್ರಮದ ಕೊನೆಯಲ್ಲಿ ಮಾತನಾಡಿದ ತಹಸೀಲ್ದಾರ್ ಶ್ವೇತಾ ಬಿ.ಕೆ. ಅವರು, ಸಾರ್ವಜನಿಕರು ನೀಡಿದ ಪ್ರತಿಯೊಂದು ಅರ್ಜಿಯೂ ಅಮೂಲ್ಯವಾದದ್ದು. ಅಹವಾಲು ಸಭೆಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡದೆ ತಕ್ಷಣ ಪರಿಶೀಲಿಸಬೇಕು. ತಾಂತ್ರಿಕ ತೊಂದರೆಗಳಿದ್ದರೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟು, ಕಾನೂನು ಚೌಕಟ್ಟಿನಲ್ಲಿ ಶೀಘ್ರ ಪರಿಹಾರ ಒದಗಿಸಬೇಕು.
ಕರ್ತವ್ಯ ಲೋಪ ಎಸಗುವ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಅಲ್ಲದೆ, ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗಾಗಿ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಮಟ್ಟದಲ್ಲೇ ಕೆಲಸಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶ್ವೇತಾ ಬಿ.ಕೆ., ವೃತ್ತ ನಿರೀಕ್ಷಕ ಶ್ರೀನಿವಾಸ್ ಎಂ., ಇ.ಓ ರಮೇಶ್, ಆರ್.ಐ. ಈಶ್ವರ್, ಪಿಡಿಒ ಗೌಸ್ಪೀರ್ ಉಪಸ್ಥಿತರಿದ್ದರು. ಮುಖಂಡರಾದ ಕಡ್ಡಿಲು ವೆಂಕಟರವಣಪ್ಪ (ದ.ಸಂ.ಸ ಜಿಲ್ಲಾ ಸಂಚಾಲಕರು), ಕೆ.ಜಿ. ವೆಂಕಟರವಣಪ್ಪ, ಜೆ.ಎನ್. ಜಾಲರಿ, ಸುರೇಂದ್ರ, ಮೆಕ್ಯಾನಿಕ್ ನಯಾಜ್, ಹಾಗೂ ಜಲಿಪಿಗಾರಪಲ್ಲಿ ಗ್ರಾಮ ಸಹಾಯಕ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಚೇಳೂರು ತಾಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಶಾಸಕರು ಸಾರ್ವಜನಿಕರ ಅಹವಾಲು ಆಲಿಸಿದರು. ತಹಸೀಲ್ದಾರ್ ಶ್ವೇತಾ ಬಿ.ಕೆ., ವೃತ್ತ ನಿರೀಕ್ಷಕ ಶ್ರೀನಿವಾಸ್ ಎಂ., ಇ.ಓ ರಮೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಇದ್ದಾರೆ.
ವರದಿ :ಯಾರಬ್. ಎಂ




