ತುರುವೇಕೆರೆ: ಭಾರತ ದೇಶ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಕ್ಷಣಾ ವ್ಯವಸ್ಥೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ದಿಶೀಲ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಮುಂದಿನ ಕೆಲವೇ ವರ್ಷಗಳಲ್ಲಿ ಆರ್ಥಿಕ ಕ್ಷೇತ್ರದಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನ ಅಲಂಕರಿಸಲಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ 77 ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರತಿಯೊಬ್ಬರೂ ಸಂವಿಧಾನಕ್ಕೆ ಬದ್ಧರಾಗಿ, ಕಾನೂನಿನಡಿಯಲ್ಲಿ ಬದುಕನ್ನು ಸಾಗಿಸಬೇಕು, ಅಧಿಕಾರಿಗಳು ಕರ್ತವ್ಯವನ್ನು ನೆರವೇರಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿದಾಗ ದೇಶ ಶಾಂತಿಯ ನೆಲೆಬೀಡಾಗಿ, ರಾಮರಾಜ್ಯದ ಕನಸು ನನಸಾಗುತ್ತದೆ. ನಮ್ಮ ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಆದರೆ ಅಮೇರಿಕಾದಲ್ಲಿ ಕೇವಲ 24 ಕೋಟಿ ಮತದಾರರಿದ್ದಾರೆ. ಭಾರತ ದೇಶ ವಿಶ್ವದಲ್ಲಿ ಆರ್ಥಿಕ ಸ್ಥಿತಿಯಲ್ಲಿ 3 ನೇ ಸ್ಥಾನದಲ್ಲಿದ್ದು, ಕೆಲವೇ ವರ್ಷಗಳಲ್ಲಿ ಎರಡನೇ ಸ್ಥಾನಕ್ಕೆ ಏರಲಿದ್ದೇವೆ. ಯಾವುದೇ ರಾಷ್ಟ್ರವನ್ನು ಎದುರಿಸುವಂತಹ, ನಮ್ಮ ದೇಶವನ್ನು ಶತ್ರುಗಳಿಂದ ರಕ್ಷಿಸಿಕೊಳ್ಳುವಷ್ಟು ಬಲಿಷ್ಠವಾಗಿ ನಮ್ಮ ರಕ್ಷಣಾ ವ್ಯವಸ್ಥೆ ಶಕ್ತಿಯುತವಾಗಿದೆ. ಹೆಣ್ಣು ಮಕ್ಕಳ ಸಿಂಧೂರವನ್ನು ಅಳಿಸಿದ ಶತ್ರುರಾಷ್ಟ್ರ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ನಡೆಸಿ ಕೆಲವೇ ದಿನಗಳಲ್ಲಿ ಪಾಕಿಸ್ತಾನ ಶರಣಾಗುವಂತೆ ಮಾಡಿದ ಕೀರ್ತಿ ಭಾರತೀಯ ಯೋಧರಿಗೆ ಸಲ್ಲುತ್ತದೆ ಎಂದರು.
ತಹಸೀಲ್ದಾರ್ ಕುಂ.ಇ. ಅಹಮದ್ ಧ್ವಜಾರೋಹಣ ನೆರವೇರಿಸಿ, ಧ್ವಜ ಸಂದೇಶ ನುಡಿದರು. ಶಾಲಾ ವಿದ್ಯಾರ್ಥಿಗಳು ಪಥಸಂಚಲನ ನಡೆಸಿ ಧ್ವಜಕ್ಕೆ ಗೌರವ ಸಲ್ಲಿಸಿದರು. 69 ನೇ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಪಡೆದ ಆಟಗಾರರನ್ನು, ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಗಳ ಮೊದಲ ಮೂವರು ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಈರಯ್ಯ ಮುಖ್ಯ ಭಾಷಣ ಮಾಡಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಾಪಣ್ಣ, ಬಿಇಒ ಸೋಮಶೇರ್, ಇಒ ಅನಂತ ರಾಜು, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಕೃಷಿ ಸಹಾಯಕ ನಿರ್ದೇಶಕಿ ಪೂಜಾ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಲಕ್ಷ್ಮೀಕಾಂತ್, ಸಿಪಿಐ ಲೋಹಿತ್, ಸಿಡಿಪಿಒ ಗೋಪಾಲಯ್ಯ, ಪಿಎಸ್ಐ ಮೂರ್ತಿ, ಕಾರ್ಮಿಕ ಇಲಾಖಾಧಿಕಾರಿ ದಿನೇಶ್, ಇಸಿಒ ಸಿದ್ದಪ್ಪ ನಾಗಪ್ಪ ವಾಲೀಕಾರ್, ಅಕ್ಷರ ದಾಸೋಹ ಅಧಿಕಾರಿ ಸವಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್




