ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್, ರಾಜ್ಯ ಸರ್ಕಾರ ಪಾಪರ್ ಆಗಿದೆ ಎಂದು ಬೋರ್ಡ್ ಹಾಕಿಕೊಳ್ಳಲಿ.ಸರ್ಕಾರದ ಖಜಾನೆಯಲ್ಲಿ ಹಣ ಇದೆಯೋ? ಇಲ್ಲವೋ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸರ್ಕಾರ ದಿವಾಳಿಯಾದಂತೆ ಕಾಣುತ್ತಿದೆ. ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಆಡು ಮುಟ್ಟದ ಸೊಪ್ಪಿಲ್ಲ, ಲೂಟಿ ಹೊಡೆಯದ ಇಲಾಖೆ ಇಲ್ಲ ಎಂಬಂತಾಗಿದೆ ಕಾಂಗ್ರೆಸ್ ಆಡಳಿತದಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
4 ಲಕ್ಷ ರೂಪಾಯಿ ಲಂಚ ಪಡೆಯುವಾಗ ಇನ್ಸ್ ಪೆಕ್ಟರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರ್ಕಾರದ ಭ್ರಷ್ಟಾಚಾರ ಎಲ್ಲಿಗೆ ಬಂದಿದೆ ನೋಡಿ. ಮೊದಲು ಟೇಬಲ್ ಕೆಳಗೆ ಲಂಚದ ಹಣ ಪಡೆಯುತ್ತಿದ್ದರು.
ಈಗ ಸಿಎ ಆರ್ ಗ್ರೌಂಡ್ ನಲ್ಲಿ ರಾಜಾರೋಷವಾಗಿ ಲಂಚ ಪಡೆಯುವಂತೆ ಆಗಿದೆ. ಇನ್ಸ್ ಪೆಕ್ಟರ್ ಗೋವಿಂದರಾಜು ಸಿಎ ಆರ್ ಗ್ರೌಂಡ್ ನಲ್ಲಿ ಲಂಚದ ಹಣ ಪಡೆಯುವಾಗ ಸಿಕ್ಕಿ ಬಿದ್ದಿದಾರೆ.
11 ಕೋಟಿ ರೂಪಾಯಿಗೆ ಡೀಲ್ ಮಾಡಿಕೊಂಡಿದ್ದರು. 1 ಲಕ್ಷ ಅಡ್ವಾನ್ಸ್ ಪಡೆದಿದರು. 4 ಲಕ್ಷ ಹಣ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್ ಬಾಯಿ ಬಡಿದುಕೊಳ್ತಿದ್ದಾರೆ.
ಇನ್ನು ಅಬಕಾರಿ ಇಲಾಖೆಯಲ್ಲಿ ಸಚಿವರೇ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಅಧಿಕಾರಿ ಸಚಿವರ ಹೆಸರು ಹೇಳಿದ್ದಾರೆ. ಈ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಕಿಡಿಕಾರಿದರು.




