ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿತ್ತು. ಬಳಿಕ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ರಾಜ್ಯ ಕಾಂಗ್ರೆಸ್ ನಾಯಕರ ಬದಲಾವಣೆ ಹೇಳಿಕೆಗಳಿಗೂ ಬ್ರೇಕ್ ಬಿದ್ದಿತ್ತು.
ಹಲವು ದಿನಗಳಿಂದ ತಣ್ಣಗಾಗಿದ್ದ ಸಿಎಂ ಬದಲಾವಣೆ ಗೊಂದಲದ ವಿಚಾರದ ಬಗ್ಗೆ ವಿಧಾನಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತೆ ಮುನ್ನೆಲೆಗೆ ತಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆಯೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಹೈಕಮಾಂಡ್ ನಮ್ಮ ತಂದೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ತಿಳಿಸಿದ್ದಾರೆ.
ಸದ್ಯಕ್ಕೆ ರಾಜ್ಯದಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ನಮ್ಮ ತಂದೆ ಸಿದ್ದರಾಮಯ್ಯನವರೇ 5 ವರ್ಷ ಪೂರ್ಣಗೊಳಿಸುತ್ತಾರೆ. ಯಾವುದೇ ಗೊಂದಲಗಳಿಗೂ ಆಸ್ಪದವಿಲ್ಲ. ಸಿದ್ದರಾಮಯ್ಯ ಉತ್ತರ ಆಡಳಿತ ನಡೆಸುತ್ತಿದ್ದಾರೆ. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದರು.
ಯತೀಂದ್ರ ಸಿದ್ದರಾಮಯ್ಯ ಅವರ ಈ ಹೇಳಿಕೆಯಿಂದ ಮತ್ತೆ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಭಿನ್ನ ಚರ್ಚೆಗಳು ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.




