ಕಾರ್ಯಕರ್ತರೇ ಗೊಂದಲ ಬೇಡ, 2028ರ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎಂದ ಮಾಜಿ ಶಾಸಕ
ತುರುವೇಕೆರೆ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಥವಾ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥೀಯಾಗಿ ಕಣಕ್ಕಿಳಿಯುವುದು ಖಚಿತ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಘೋಷಿಸಿದರು.
ಚಿಕ್ಕೋನಹಳ್ಳಿ ಗೇಟ್ ಬಳಿಯಿರುವ ತಮ್ಮ ಫಾರಂ ಹೌಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೂರು ಬಾರಿ ಕಣಕ್ಕಿಳಿದು, ಒಮ್ಮೆ ಜಯಗಳಿಸಿ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿದ್ದೇನೆ. ಅಲ್ಲದೆ ಮೂರೂ ಚುನಾವಣೆಗಳಲ್ಲಿ ಕ್ಷೇತ್ರದ ಜನತೆ ನನಗೆ 60 ಸಾವಿರಕ್ಕೂ ಅಧಿಕ ಮತ ನೀಡಿ ಆರ್ಶೀವದಿಸಿದ್ದಾರೆ. ನನ್ನನ್ನು ನಂಬಿರುವ ಜನರನ್ನು ನಡುನೀರಿನಲ್ಲಿ ಕೈಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಸದ್ಯ ಬಿಜೆಪಿ, ಜೆಡಿಎಸ್ ಮೈತ್ರಿಯಿದ್ದು, ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರೆದರೆ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ. ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಪಕ್ಷವನ್ನು ಸಂಘಟಿಸಿ ಎಂದರು.
ಶಾಸಕ ಎಂ.ಟಿ.ಕೃಷ್ಣಪ್ಪನವರು ಅವರ ಪಕ್ಷದ ಬಗ್ಗೆ ಮಾತನಾಡಿದ್ದಾರೆ, ನಾನು ಆ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದಿರುವುದು ಮಾಧ್ಯಮಗಳ ಮೂಲಕ ತಿಳಿದಿದೆ. ಜೆಡಿಎಸ್, ಬಿಜೆಪಿ ಮೈತ್ರಿ ಇರುವುದರಿಂದ ಎಂ.ಟಿ.ಕೃಷ್ಣಪ್ಪನವರೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ನನಗೇ ಟಿಕೆಟ್ ಕೊಡಿಸಿ, ಗೆಲ್ಲಿಸಿಕೊಳ್ಳಬಹುದೇನೋ ಎಂದ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಯಾವುದೇ ಶಾಸಕರಿಗೆ ಕ್ಷೇತ್ರದ ಅಭಿವೃದ್ದಿಗೆ ಹಣ ನೀಡುತ್ತಿಲ್ಲ. ತುರುವೇಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೂ ಹಣ ನೀಡಿಲ್ಲ. ಇದು ಎಲ್ಲರಿಗೂ ಸಮಸ್ಯೆಯಾಗಿದೆ. ಬಿಜೆಪಿ, ಜೆಡಿಎಸ್ ಮೈತ್ರಿ ಇರುವುದರಿಂದ ತಾಲೂಕಿನ ಅಭಿವೃದ್ದಿಯ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಾಜಿ ಶಾಸಕರು ಉತ್ತರಿಸಿದರು.
ಶಾಸಕನಾಗಿದ್ದ 5 ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ನೂರಾರು ಕೋಟಿ ರೂಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಿದ್ದೇನೆ. ತಾಲೂಕಿನ ಮೂಲೆಮೂಲೆಯ ಹಳ್ಳಿಗಳಿಗೂ ಸಿಸಿ ರಸ್ತೆ, ಮೂಲಸೌಕರ್ಯ ಒದಗಿಸಿದ್ದೇನೆ, ಕೊರೊನಾ ಸಂದರ್ಭದಲ್ಲಿ ನಾಗರೀಕರಿಗೆ, ರೈತರಿಗೆ ಅಗತ್ಯ ರೀತಿಯಲ್ಲಿ ನೆರವಾಗಿದ್ದೇನೆ. ಕೊರೊನಾ ತಡೆಗಟ್ಟಲು ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ನಾಗರೀಕರಿಗೆ ಒದಗಿಸಿದ್ದೇನೆ. ಪಟ್ಟಣದ ಪ್ರತಿ ವಾರ್ಡಿನ ಅಭಿವೃದ್ದಿಗೆ ಅನುದಾನ ನೀಡಿದ್ದೇನೆ. ಒಟ್ಟಾರೆ ತಾಲೂಕಿನ ಸರ್ವತೋಮುಖ ಅಭಿವೃದ್ದಿಗೆ ಕಂಕಣಬದ್ಧನಾಗಿ ದುಡಿದಿದ್ದೇನೆ. ಹೀಗಿರುವಾಗ ಮತದಾರರು ನನಗೆ ಕಳೆದ ಚುನಾವಣೆಯಲ್ಲಿ 60 ಸಾವಿರಕ್ಕೂ ಅಧಿಕ ಮತ ನೀಡಿದ್ದಾರೆ. ಅದನ್ನು ಮರೆತು ಮನೆಯಲ್ಲಿರಲು ಸಾಧ್ಯವೇ? ಅವರ ಸೇವೆ ಮಾಡುವ ಕರ್ತವ್ಯ ನನ್ನದಲ್ಲವೇ? ನಾನು ರಾಜಕಾರಣ ಮಾಡಲೆಂದೇ ಬಂದಿದ್ದೇನೆ, ಮುಂಬರುವ ಚುನಾವಣೆಯಲ್ಲಿ ಟಿಕೆಟ್ ತರುತ್ತೇನೆ, ಕಾರ್ಯಕರ್ತರು ಶ್ರಮವಹಿಸಿ ನನ್ನನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ದಿಗೆ ಸಹಕರಿಸಲು ಸಿದ್ದರಾಗಿ ಎಂದು ಕರೆ ನೀಡಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕೇವಲ ಬಿಜೆಪಿ ಪಕ್ಷದ ಕಾರ್ಯಕರ್ತರು ಮಾತ್ರವಲ್ಲ, ಜೆಡಿಎಸ್, ಕಾಂಗ್ರೆಸ್ ನ ಸಾಕಷ್ಟು ಮುಖಂಡರು, ಕಾರ್ಯಕರ್ತರು ನನ್ನನ್ನು ಪ್ರತಿನಿತ್ಯ ಒತ್ತಾಯಿಸುತ್ತಿದ್ದಾರೆ. ನಮ್ಮ ಪಕ್ಷದ ಹೈಕಮಾಂಡ್, ರಾಷ್ಟ್ರೀಯ ನಾಯಕರು, ಕೇಂದ್ರ ಸಚಿವರು, ರಾಜ್ಯ ನಾಯಕರುಗಳು ಸಹ ಸಂಘಟನೆ ಮಾಡಿ, ಟಿಕೆಟ್ ಜವಾಬ್ದಾರಿ ನಮ್ಮದು ಎಂದಿದ್ದಾರೆ. ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ಎನ್.ಡಿ.ಎ. ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. 2028 ರ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ಸೂರ್ಯ ಚಂದ್ರರಷ್ಟೇ ಸತ್ಯವಾದುದು. ಆದರೆ ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಪ್ರಕಾಶ್ ಯಾದವ್, ಪ್ರಧಾನ ಕಾರ್ಯದರ್ಶಿ ಮಹೇಶ್, ಜಿಪಂ ಮಾಜಿ ಸದಸ್ಯ ಉಗ್ರಯ್ಯ, ಮುಖಂಡರಾದ ಕಡೇಹಳ್ಳಿ ಸಿದ್ದೇಗೌಡ, ಅಂಜನ್ ಕುಮಾರ್, ಚಿದಾನಂದ್, ಕಾಂತರಾಜು, ತಂಡಗ ಧನಪಾಲ್, ನವೀನ್ ಬಾಬು, ರಘು, ವಿ.ಬಿ.ಸುರೇಶ್, ಹರಿಕಾರನಹಳ್ಳಿ ಪ್ರಸಾದ್, ಸ್ವಪ್ನನಟೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್




