ಬಾಗಲಕೋಟೆ : ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಜಿಲ್ಲಾಡಳಿತವು ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್ಗೆ ಒಂದು ತಿಂಗಳ ಕಾಲ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಕಳೆದ 2 ದಿನಗಳ ಹಿಂದೆ ನಗರದಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದೆ.
ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಗಪ್ಪ (ಬಾ.ಆ.ಸೇ) ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. “ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 (BNSS) ಸೆಕ್ಷನ್ 163” ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿರುವ ಜಿಲ್ಲಾಧಿಕಾರಿಗಳು, ಫೆಬ್ರವರಿ 21, 2026 ರಿಂದ ಮಾರ್ಚ್ 21, 2026 ರವರೆಗೆ ಅನ್ವಯವಾಗುವಂತೆ ಒಂದು ತಿಂಗಳ ಕಾಲ ಪ್ರಮೋದ ಮುತಾಲಿಕ್ ಅವರು ಜಿಲ್ಲೆಯ ಗಡಿ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ವಿಧಿಸಿದ್ದಾರೆ.




