ಬೆಂಗಳೂರು : ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಅತ್ಯಂತ ದಾರುಣ ಘಟನೆಯೊಂದು ನಡೆದಿದೆ.
ನೀರಿನ ಬಕೆಟ್’ಗೆ ಬಿದ್ದು ಮಗು ಸಾವನ್ನಪ್ಪಿದ್ದನ್ನು ಕಂಡು ಮರುಗಿದ ತಾಯಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರನ್ನು ತಾಯಿ ಪ್ರತಿಭಾ (39) ಮತ್ತು ಮಗ ಅಗಸ್ತ್ಯ.ಎಂದು ಗುರುತಿಸಲಾಗಿದೆ.
ಪ್ರತಿಭಾ ಮತ್ತು ಅವರ ಪತಿ ಮಹಂತೇಶ್ ಇಬ್ಬರೂ ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದರು. ಪ್ರತಿಭಾ ಅವರು ಮನೆಯಿಂದಲೇ ಕೆಲಸ ಮಾಡುತ್ತಿದ್ದರು.
ಪ್ರತಿಭಾ ಅವರು ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಟೆರೇಸ್ಗೆ ಹೋಗಿದ್ದ ಸಮಯದಲ್ಲಿ, ಮಗು ಆಟವಾಡುತ್ತಾ ಬಚ್ಚಲು ಮನೆಗೆ ಹೋಗಿದೆ. ಅಲ್ಲಿ ನೀರಿನಿಂದ ತುಂಬಿದ್ದ ಬಕೆಟ್’ಗೆ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದೆ.
ಆತ್ಮಹತ್ಯೆಗೆ ಶರಣಾದ ತಾಯಿ: ಟೆರೇಸ್ ನಿಂದ ವಾಪಸ್ ಬಂದ ಪ್ರತಿಭಾ ಅವರು ಮಗುವಿನ ಸ್ಥಿತಿಯನ್ನು ಕಂಡು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮಗುವಿನ ಸಾವಿಗೆ ತಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.




