ಬೆಂಗಳೂರು: ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ.
ಇಂದು ಎರಡೂ ಕ್ಷೇತ್ರಗಳಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಸಿಎಂ ಪ್ರಚಾರ ನಡೆಸಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.
ಮೊದಲು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ಸಿಎಂ ಬೆಳಿಗ್ಗೆ 11.15ಕ್ಕೆ ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ.
ನಂತರ ದುರ್ಗಾಂಬಿಕಾ ದೇವಸ್ಥಾನದ ಬಳಿ ಪ್ರಚಾರ ಸಭೆ ನಡೆಸಲಿದ್ದಾರೆ. ನಂತರ ಆಜಾದ್ ನಗರ, ಭಾಷಾ ನಗರ ಸೇರಿದಂತೆ ಹಲವು ಕಡೆ ಸಿಎಂ ರೋಡ್ ಶೋ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ ಸೇರಿ ಹಲವು ನಾಯಕರು ಸಾಥ್ ನೀಡಲಿದ್ದಾರೆ. ಮೊನ್ನೆ ದಾವಣಗೆರೆ ಗ್ರಾಮೀಣ ಪ್ರದೇಶದಲ್ಲಿ ಸಿಎಂ ಪ್ರಚಾರ ನಡೆಸಿದ್ದರು. ಇಂದು ದಾವಣಗೆರೆ ನಗರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ದಾವಣಗೆರೆಯಲ್ಲಿ ಪ್ರಚಾರ ನಡೆಸಿದ ನಂತರ ಬಾಗಲಕೋಟೆಗೆ ತೆರಳಲಿದ್ದಾರೆ. ಸಂಜೆ 5:40ಕ್ಕೆ ಬಾಗಲಕೋಟೆಗೆ ಆಗಮಿಸಲಿರುವ ಸಿಎಂ ಬಾಗಲಕೋಟೆಯಲ್ಲಿ ಮೂರನೇ ಹಂತದ ಪ್ರಚಾರ ನಡೆಸಲಿದ್ದಾರೆ.
ಬಸವೇಶ್ವರ ವೃತ್ತದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇಂದು ಬಾದಾಮಿಯಲ್ಲಿಯೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬಾದಾಮಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ.




