ಮೈಸೂರು : ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕ ಉಪ ಚುನಾವಣೆ ಗದ್ದಲದಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು.
ಆದರೆ, ಇದೀಗ ಗೃಹ ಸಚಿವ ಜಿ ಪರಮೇಶ್ವರ್ ನಾಯಕತ್ವ ಬದಲಾವಣೆ ವಿಚಾರವಾಗಿ ಸ್ಫೋಟಕವಾದ ಹೇಳಿಕೆ ನೀಡಿದ್ದು, ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ.ಇದಕ್ಕೆ ಹೈ ಕಮಾಂಡ್ ಸ್ಪಷ್ಟನೆ ಬೇಕಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಅವರು, ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು.
ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು.
2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ? ಹೈ ಕಮಾಂಡ್ ಯಾವ ಗೊಂದಲಗಳನ್ನ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರು ಅದು ಮುಖ್ಯ ಅಲ್ಲ ಎಂದರು.
ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು.




