ಬೆಳಗಾವಿ: ಸಿದ್ದೇಶ್ವರ ಜಾತ್ರೆಯ ಸಂದರ್ಭದಲ್ಲಿ ಮನೆಯ ಮುಂದೆ ಕುಣಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು 50 ವರ್ಷದ ಸಂಗನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸಂಗನಗೌಡ ಮತ್ತು ಆರೋಪಿಗಳ ಕುಟುಂಬದ ನಡುವೆ ಕಳೆದ ಕೆಲವು ವರ್ಷಗಳಿಂದ ದ್ವೇಷವಿತ್ತು.
ಸಿದ್ದೇಶ್ವರ ಜಾತ್ರೆಯ ವೇಳೆ ಸಂಗನಗೌಡ ಅವರು ತಮ್ಮ ರಾಜಕೀಯ ವಿರೋಧಿಗಳ ಮನೆಯ ಮುಂದೆ ಕುಣಿಯುತ್ತಿದ್ದರು. ಈ ವೇಳೆ ‘ಮನೆಯ ಮುಂದೆ ಕುಣಿಯಬೇಡ’ ಎಂದು ಆರೋಪಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಗಲಾಟೆಯು ವಿಕೋಪಕ್ಕೆ ತಿರುಗಿ, ಆರೋಪಿಗಳು ಕುಡಗೋಲು, ಕೊಡಲಿ ಮತ್ತು ಕಬ್ಬಿಣದ ರಾಡ್ಗಳಿಂದ ಸಂಗನಗೌಡ ಅವರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ದೇವಪ್ಪ ಬಳಗಣ್ಣವರ, ಮಂಜುನಾಥ ಬಳಗಣ್ಣವರ, ರುದ್ರಪ್ಪ ವಿಜಯ್, ಸೂರಪ್ಪ ಸಿದ್ದಪ್ಪ ನಾಗರಾಜ, ಬಸವಂತಪ್ಪ ಹಾಗೂ ಇತರರು ಎಂದು ಗುರುತಿಸಲಾಗಿದೆ. ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




