ಮಂಗಳೂರು: ವೈದ್ಯೋ ನಾರಾಯಣ ಹರಿಃ ಎನ್ನುವ ಹಾಗೆ ವೆನ್ಲಾಕ್ ಸರಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ ತೆಂಗಿನ ಗರಿ ಹಾಗೂ ಬಾಲಕನ ಕುತ್ತಿಗೆಗೆ ಹಾಕಿಕೊಂಡಿದ್ದ ಚೈನ್ ಹೊರ ತೆಗೆಯುವ ಮೂಲಕ ಜೀವದಾನ ನೀಡಿದ್ದಾರೆ.
ಅಸ್ಸಾಂ ಮೂಲದ ಬಾಲಕ ಕಮಲ್ ಹುಸೇನ್ ಶಸ್ತ್ರ ಚಿಕಿತ್ಸೆಗೆ ಒಳಪಟ್ಟು ಚೇತರಿಸಿಕೊಳ್ಳುತ್ತಿದ್ದು, ಬಾಲಕನ ಕುಟುಂಬ ಅಸ್ಸಾಂ ರಾಜ್ಯದ ಗುವಾಹಟಿ ಮೂಲದವರಾಗಿದ್ದು, ಮಡಿಕೇರಿಯಲ್ಲಿ ಕಾಫಿ ಎಸ್ಟೇಟ್ನಲ್ಲಿ ಹೆತ್ತವರು ಕೂಲಿ ಕೆಲಸ ಮಾಡುತ್ತಿದ್ದರು. ಶನಿವಾರ ಕಮಲ್ ಹುಸೇನ್ (12) ಬಾಲಕ ಆಟವಾಡುತ್ತಿದ್ದಾಗ ಹತ್ತಿರದಲ್ಲಿದ್ದ ತೆಂಗಿನ ಮರದ ಗರಿಯೊಂದು ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು.
ಸುಮಾರು 20 ಸೆಂ.ಮೀ ಉದ್ದದ ತೆಂಗಿನ ಗರಿ ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್ನೊಂದಿಗೆ ಎದೆಯೊಳಗೆ ಹೊಕ್ಕಿತ್ತು.
ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರೆಫರ್ ಮಾಡಲಾಗಿತ್ತು.
ತಕ್ಷಣವೇ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ತೆಂಗಿನ ಗರಿಯ ತುಂಡು ಹಾಗೂ ಚೈನ್ ಹೊರತೆಗೆದು ಬಾಲಕನಿಗೆ ಹೊಸ ಬದುಕು ನೀಡಿದ್ದಾರೆ.
ವೈದ್ಯರಿಗೆ ಪ್ರಶಂಸೆಯ ಮಹಾಪೂರ: ಡಾ. ಸುರೇಶ್ ಪೈ ನೇತೃತ್ವದ ವೆನ್ಲಾಕ್ ಆಸ್ಪತ್ರೆಯ ಕಾರ್ಡಿಯೋಥೋರಾಸಿಕ್ ಮತ್ತು ವ್ಯಾಸ್ಕುಲರ್ ಸರ್ಜರಿ (ಸಿಟಿವಿಎಸ್) ತಂಡ ರಾತ್ರಿ 1.30 ರಿಂದ 3.30ರ ನಡುವೆ ಬಾಲಕನ ಸರ್ಜರಿ ನಡೆಸಿತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡಕ್ಕೆ ರಾಜ್ಯದ ನಾನಾ ಭಾಗಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.