ಚೇಳೂರು: ತಾಲೂಕಿನ ಪಾಳ್ಯಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆದ್ದರಾಜುಪಲ್ಲಿ ಗ್ರಾಮದ ಸಮೀಪವಿರುವ ಐತಿಹಾಸಿಕ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಕಲ್ಯಾಣಿಯ ಸ್ವಚ್ಛತಾ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿಗಳು ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಈ ಶ್ರಮದಾನ ಅಭಿಯಾನದಲ್ಲಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಕಲ್ಯಾಣಿಯ ಹೂಳು ಮತ್ತು ಸುತ್ತಲೂ ಬೆಳೆದಿದ್ದ ಗಿಡಗಂಟೆಗಳನ್ನು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಾಳ್ಯಕೆರೆ ಪಿಡಿಒ ಕೆ. ವೆಂಕಟಾಚಲಪತಿ ಅವರು, ಪುರಾತನ ಕಲ್ಯಾಣಿಗಳು ನಮ್ಮ ಸಂಸ್ಕೃತಿಯ ಪ್ರತೀಕ. ಇವುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಗ್ರಾಮಸ್ಥರ ಸಹಕಾರದೊಂದಿಗೆ ಈ ಐತಿಹಾಸಿಕ ಕಲ್ಯಾಣಿಯನ್ನು ಪುನರುಜ್ಜೀವನಗೊಳಿಸಿ, ಮಳೆ ನೀರು ಸಂಗ್ರಹವಾಗುವಂತೆ ಮಾಡುವುದು ನಮ್ಮ ಗುರಿ ಎಂದು ತಿಳಿಸಿದರು.


ನಲ್ಲಗುಟ್ಲಪಲ್ಲಿ ಪಿಡಿಒ ನಾರಾಯಣಸ್ವಾಮಿ ಮಾತನಾಡಿ, ಜಲಮೂಲಗಳ ಸಂರಕ್ಷಣೆಯಿಂದ ಅಂತರ್ಜಲ ಮಟ್ಟ ಸುಧಾರಿಸಲು ಸಾಧ್ಯ. ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕರು ಕೈಜೋಡಿಸಿದರೆ ಇಂತಹ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗುತ್ತವೆ ಎಂದು ಆಶಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಸೋಮನಾಥಪುರ ಪಿಡಿಒ ಶೋಭನ ರೆಡ್ಡಿ, ಚೇಳೂರು ಪಿಡಿಒ ಗೌಸ್ ಪೀರ್, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು. ಅಲ್ಲದೆ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಗ್ರಾಮದ ಹಿರಿಯ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ಶ್ರಮದಾನದಲ್ಲಿ ಭಾಗವಹಿಸಿ ಕಲ್ಯಾಣಿಯ ಅಂದವನ್ನು ಹೆಚ್ಚಿಸಿದರು.
ವರದಿ :ಯಾರಬ್. ಎಂ.




