ಗದಗ: ಮಗಳ ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಂದಲೇ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ.
ಗಿರೀಶಪ್ಪ ಆಲೂರು(47) ಮೃತ ದುರ್ದೈವಿ. ಮಗಳ ಮದುವೆ ವಿಚಾರವಾಗಿ ಫೆ.27ರಂದು ಸಹೋದರರಿಂದಲೇ ಗಂಭೀರವಾಗಿ ಹಲ್ಲೆಗೊಳಗಾಗಿ ಚಿಕಿತ್ಸೆ ಫಲಿಸದೆ ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗಿರೀಶಪ್ಪ ಮತ್ತು ಲಕ್ಷ್ಮೀ ದಂಪತಿಯ ಮಗಳಾದ ಪವಿತ್ರಾಳನ್ನು ಇತ್ತೀಚೆಗಷ್ಟೇ ಸಂಬಂಧದಲ್ಲಿಯೇ ಹುಡುಗನ ನೋಡಿ ಮದುವೆ ಮಾಡಿಕೊಡಲಾಗಿತ್ತು. ಆದರೆ ಈ ಮದುವೆಗೆ ಗಿರೀಶಪ್ಪ ಸಹೋದರರು ವಿರೋಧ ವ್ಯಕ್ತಪಡಿಸಿದ್ದರು.
ಆ ಬಳಿಕ ತಮ್ಮನ ಮನೆಯಲ್ಲಿದ್ದ ತಂದೆ ತಾಯಿ ಆಶೀರ್ವಾದ ಪಡೆದು ಬಾರಮ್ಮ ಎಂದು ಗಿರೀಶಪ್ಪ ಮಗಳನ್ನು ಕಳುಹಿಸಿದ್ದ. ಮದುವೆ ವಿಷಯವಾಗಿ ನಮ್ಮನ್ನ ಕೇಳದವರು ಈಗ ಯಾಕೆ ಬಂದಿದ್ದು ಎಂದು ಈ ವೇಳೆ ಸಹೋದರರಾದ ಈರಣ್ಣ ಮತ್ತು ಶಿವಕುಮಾರ್ ಗಲಾಟೆ ತೆಗೆದಿದ್ದರು ಎನ್ನಲಾಗಿದೆ.
ಗಲಾಟೆ ವಿಕೋಪಕ್ಕೆ ಹೋಗಿ ಆರೋಪಿಗಳು ಗಿರೀಶಪ್ಪ ಮತ್ತು ಅವರ ಪತ್ನಿ ಲಕ್ಷ್ಮೀ ಅವರ ಮೇಲೆ ಹಲ್ಲೆ ನಡೆಸಿದ್ದರು. ಗಿರೀಶಪ್ಪ ಮೇಲೆ ಬಾರುಕೋಲು, ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಗಿರೀಶಪ್ಪ ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶಿವಕುಮಾರ್ ಆಲೂರು, ರತ್ನವ್ವ ಆಲೂರು, ಈರಣ್ಣ ಆಲೂರು ಮತ್ತು ಗೀತಾ ಆಲೂರು ಹಲ್ಲೆ ನಡೆಸಿರುವ ಆರೋಪಿಗಳು. ಘಟನೆಯಲ್ಲಿ ಗಿರೀಶಪ್ಪ ಗಂಭೀರವಾಗಿ ಗಾಯಗೊಂಡಿದ್ದರು.
ಸರ್ಕಾರಿ ಕೆಲಸ ಇರುವ ಹುಡುಗನಿಗೇ ಮಗಳನ್ನ ಕೊಟ್ಟು ಮದ್ವೆ ಮಾಡು ಎಂದು ಶಿವಕುಮಾರ್ ತಿಳಿಸಿದ್ದರೂ, ಸರ್ಕಾರಿ ಕೆಲಸದ ಹುಡುಗನಾದ್ರೆ ನಮ್ಮನ್ನ ನೋಡಲುಬರೋದಿಲ್ಲ ಎಂದು ಗಿರೀಶಪ್ಪ ವಾದಿಸಿದ್ದರು.
ಕೊನೆಗೆ ತನ್ನಾಸೆಯಂತೆ ಸಂಬಂಧಿಕರಲ್ಲೇ ಮಗಳನ್ನ ಕೊಟ್ಟು ಮದುವೆ ಮಾಡಿದ್ದರು. ಆದರೆ ಅಂತಿಮವಾಗಿ ಅಣ್ಣ ಮಾತು ಕೇಳಲಿಲ್ಲ ಎಂಬ ಸಿಟ್ಟಿಗೆ ಗಿರೀಶಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಗಿರೀಶಪ್ಪ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.




