ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ರಾಜ್ಯ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಆಸ್ತಿ ದಾಖಲೆ ಪರಿಶೀಲಿಸಿದ್ದಾರೆ.
ಬೆಂಗಳೂರು, ಮೈಸೂರು, ದಾವಣಗೆರೆ, ಶಿವಮೊಗ್ಗದಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಗೆ ಸೇರಿದ 11 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನಲ್ಲಿ ಐದು, ಬೆಂಗಳೂರಿನಲ್ಲಿ ಆರು ಕಡೆ ದಾಳಿ ನಡೆದಿದ್ದು, ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಬೆಸ್ಕಾಂ ಇಂಜಿನಿಯರ್ ಆರ್.ಎಚ್. ಅರ್ಜುನ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾವಣಗೆರೆ ಬೆಸ್ಕಾಂ ಸಿವಿಲ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಜುನ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದ ತಂಡ ದಾಳಿ ಮಾಡಿದೆ.
ಅರ್ಜುನ್ ವಾಸವಾಗಿದ್ದ ದಾವಣಗೆರೆ ನಗರದ ನಿಟ್ಟುವಳ್ಳಿಯ ರೂಂ, ಕಚೇರಿ, ಶಿವಮೊಗ್ಗದ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರ, ಚಿನ್ನಾಭರಣ, ಬೆಳ್ಳಿ ಪತ್ತೆಯಾಗಿದೆ ಎನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.




