ಬೆಳಗಾವಿ : ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಇಲ್ಲಿನ ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ಇಂದು ನಡೆಸಿದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣದ ವೇಳೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಅಡ್ಡಿಪಡಿಸಿದರು ಈ ಪ್ರಕರಣ ಸಂಬಂಧ ಕಾರ್ಯಕರ್ತೆಯರನ್ನು ಹಿಂಡಲಗಾ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ.
ಗೋ..ಗೋ..ಪಾಕಿಸ್ತಾನ ಎಂದು ಘೋಷಣೆ ಕೂಗುವ ಮೂಲಕ ಕಾರ್ಯಕರ್ತೆಯರು ಅಡ್ಡಿಪಡಿಸಿದಾಗ ಅವರನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದು, ವೈದ್ಯಕೀಯ ತಪಾಸಣೆಗೆ ಕರೆತಂದಿದ್ದಾರೆ.
ಬೆಳಗಾವಿಯ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಿಜೆಪಿ ಕಾರ್ಯಕರ್ತೆಯರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು, ಈ ಪ್ರಕ್ರಿಯೆ ಬಳಿಕ ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆ ಇದೆ.
ಇನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರೆ, ಬಿಜೆಪಿ ಕಾರ್ಯಕರ್ತೆಯರನ್ನು ಜೈಲಿಗೆ ಕಳುಹಿಸುವ ಸಂಭವವಿದೆ ಎಂದು ತಿಳಿದುಬಂದಿದೆ. ಕಾರ್ಯಕರ್ತೆಯರನ್ನು ಟಿಳಕವಾಡಿ ಸಿಪಿಐ ಪರುಶರಾಮ ಪೂಜಾರಿ ಮತ್ತು ಕ್ಯಾಂಪ್ ಪಿಎಸ್ಐ ರುಕ್ಮಿಣಿ ಅವರು ಕರೆತಂದಿದ್ದಾರೆ.
ಪೊಲೀಸರು ಬಿಜೆಪಿ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗುವಾಗ, ವಾಹನಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಲ್ಲದೇ, ಸ್ಥಳದಲ್ಲಿ ಕೆಲಕಾಲ ಹೈಡ್ರಾಮವೇ ನಡೆದಿದೆ.