ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಧಾರವಾಡ ಹೈಕೋರ್ಟ್ ಪೀಠಕ್ಕೆ ಬಾಂಬ್ ಬೆದರಿಕೆ ಘಟನೆ ಬೆನ್ನಲ್ಲೇ ಇದೀಗ ಹಲವು ಜಿಲ್ಲೆಗಳ ನ್ಯಾಯಾಲಯಗಳಿಗೂ ಇಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ.
ಧಾರವಾಡ ಹೈಕೋರ್ಟ್ ಪೀಠಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ಪರಿಶೀಲನೆ ನಡೆದಿದೆ.
ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೋರ್ಟ್ ನಲ್ಲಿ ಬಾಂಬ್ ಇಡಲಾಗಿದ್ದು, ಅದು ಸ್ಫೋಟಗೊಳ್ಳಲಿದೆ ಎಂದು ಇ-ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ ಚಿತ್ರದುರ್ಗ, ದಾವಣಗೆರೆ ಜಿಲ್ಲಾ ಕೋರ್ಟ್ ಗಳಿಗೂ ಬಾಂಬ್ ಬೆದರಿಕೆ ಹಾಕಲಾಗಿದೆ. ಕೋರ್ಟ್ ನ ಅಧಿಕೃತ ಇ-ಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೋರ್ಟ್ ಗೆ ತೆರಳಿರುವ ಪೊಲೀಸರು, ಬಾಂಬ್ ಪತ್ತೆ ದಳ ಪರಿಶೀಲನೆ ನಡೆಸುತ್ತಿದೆ.
ಈ ನಡುವೆ ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಕರೆ ಬಂದಿದೆ. ನ್ಯಾಯಾಲಯದ ಕಲಾಪವನ್ನು ಸ್ಥಗಿತಗೊಳಿಸಿ ವಕೀಲರು, ನ್ಯಾಯಾಧೀಶರು ಕೋರ್ಟ್ ನಿಂದ ಹೊರ ಬಂದು ನಿಂತಿದ್ದಾರೆ.
ಇಂದು ಮಧ್ಯಾಹ್ನ 11 ಗಂಟೆ ಸುಮಾರಿಗೆ ಮಂಡ್ಯ ಜಿಲ್ಲಾ ನ್ಯಾಯಾಧೀಶರ ಇ-ಮೇಲ್ ಗೆ ಬಾಂಬ್ ಬೆದರಿಕೆ ಬಂದಿದೆ. ಕೋರ್ಟ್ ನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಶ್ವಾನದಳ, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.
ಇಂದು ಒಂದೇ ದಿನದಲ್ಲಿ ರಾಅಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಕೋರ್ಟ್ ಗಳ ಆವರಣಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.




