ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವೃಂದದ ವತಿಯಿಂದ ಕೈಗೊಂಡ ಮುಷ್ಕರದ ಯಾವುದೇ ಬೇಡಿಕೆಗಳನ್ನು ಈಡೇರಿಸದ ಕಾರಣ ರಾಜ್ಯವ್ಯಾಪಿ ೨ನೇ ಹಂತದ ಮುಷ್ಕರಕ್ಕೆ ಕರೆ
ಇಲಕಲ್ಲ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ದಿನಾಂಕ:೨೨-೦೯-೨೦೨೪ ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ದಿನಾಂಕ:೨೬-೦೯-೨೦೨೪ ರಿಂದ ೦೩-೧೦-೨೦೨೪ ರವರೆಗೆ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ ದಿನಾಂಕ: ೦೩-೧೦-೨೦೨೪ ರಂದು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿರುತ್ತಾರೆ. ಅದರಂತೆ ಸದರಿ ದಿನದಿಂದಲೇ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಗಿರುತ್ತದೆ. ತದನಂತರ ಸರ್ಕಾರವು ಈ ವೃಂದದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ ಬದಲಾಗಿ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿರುತ್ತದೆ. ಆದ್ದರಿಂದ ಉಲ್ಲೇಖದ ಸಭೆಯಲ್ಲಿ ಮೇಲ್ಕಂಡ ಎಲ್ಲಾ ಕಾರಣಗಳಿಗಾಗಿ ಮುಷ್ಕರದ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿಗೆ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗುವದು ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ತಿಳಿಸಿದರು.
ಈ ಸಂಧರ್ಭದಲ್ಲಿ ನಾಸೀರ ಬೋರಗಿ, ಮಹಾಂತೇಶ ಕಲ್ಮಠ, ಮೋದಿನಮಾ ಕುಂಟೋಗಿ, ಕು. ಪಲ್ಲವಿ, ಸುಧಾರಾಣಿ ಪಮ್ಮಾರ, ಭಗವಂತರಾಯ್ ಬಿರಾದರ, ಮಹೇಶ ವಾಗಮೊರಿ ಉಪಸ್ಥಿತರಿದ್ದರು.
ವರದಿ: ದಾವಲ್ ಶೇಡಂ