ರಾಯಚೂರು: ನಗರದ ವಿಜ್ಞಾನ ಕೇಂದ್ರದಲ್ಲಿ ಪ್ರೋಗ್ರಾಮ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಮೃತಳ ಪೋಷಕರು ಪತಿ ಮತ್ತು ಅತ್ತೆಯ ವಿರುದ್ಧ ಕೊಲೆ ಹಾಗೂ ವರದಕ್ಷಿಣೆ ಕಿರುಕುಳ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಾರೆ.
ನಗರದ ಐಬಿ ರಸ್ತೆಯ ನಿವಾಸಿ ವಿದ್ಯಾ ಅಲಿಯಾಸ್ ಸುಧಿಕ್ಷಾ (30) ಮೃತ ಮಹಿಳೆಯಾಗಿದ್ದಾರೆ. ಅವರು ಸುಮಾರು ಮೂರು ವರ್ಷಗಳ ಹಿಂದೆ ಮಂಜುನಾಥ ಎಂಬಾತನೊಂದಿಗೆ ವಿವಾಹವಾಗಿದ್ದರು. ಮದುವೆಯಾಗಿ ನಾಲ್ಕು ತಿಂಗಳಲ್ಲೇ ಗಂಡನ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ತವರು ಮನೆಯವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ದೈಹಿಕ ಹಲ್ಲೆಗೂ ಒಳಗಾಗಿರುವುದಾಗಿ ಅವರು ಹೇಳಿಕೊಂಡಿದ್ದರು.
ವರದಕ್ಷಿಣೆ ವಿಚಾರವಾಗಿ ಗಂಡ ಮಂಜುನಾಥ ಹಾಗೂ ಅತ್ತೆ ಕವಿತಾ ದಿನನಿತ್ಯ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿದೆ.
ಭಾನುವಾರ ಮಧ್ಯಾಹ್ನ ಮಹಿಳೆಯ ತಂದೆ ಮೃತ್ಯುಂಜಯ ಸ್ವಾಮಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿ ಬಂದಿದ್ದರು. ಬಳಿಕ ಸಂಜೆ 7.30ರ ಸುಮಾರಿಗೆ, ಪತಿ ಮತ್ತು ಅತ್ತೆ ಸೇರಿ ವರದಕ್ಷಿಣೆ ವಿಚಾರವಾಗಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಮೃತಳ ತಂದೆ ಆರೋಪಿಸಿದ್ದಾರೆ.
ಈ ಕುರಿತು ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಾಂತವೀರ ಹಾಗೂ ತಹಶೀಲ್ದಾರ್ ಪರಶುರಾಮ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಿಮ್ಸ್ ಶವಗಾರದ ಮುಂದೆ ಮೃತಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ನ್ಯಾಯ ಒದಗಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಎಸ್ ಪಿ ಹೇಳಿಕೆ; ಈ ಕುರಿತು ಎಸ್ ಪಿ ಅರುಣಾಂಗ್ಷುಗಿರಿ ಪ್ರತಿಕ್ರಿಯಿಸಿ ಮೃತಳ ತಂದೆ ನೀಡಿದ ದೂರಿನ ಆಧಾರದ ಮೇಲೆ ವರದಕ್ಷಿಣಿ ಕಿರುಕುಳ, ಕೊಲೆ ಪ್ರಕರಣ ದಾಖಲಾಗಿದ್ದು ಆರೋಪಿ ಪತಿ ಮಂಜುನಾಥ ನನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಮಾದ್ಯಮದ ಪ್ರತಿಕ್ರಿಸಿದರು.
ವರದಿ: ಗಾರಲದಿನ್ನಿ ವೀರನ ಗೌಡ




