ದೆಹಲಿ ಚುನಾವಣೆ: ಬಿಜೆಪಿ ಗೆಲುವು: ತಿಪಟೂರಿನಲ್ಲಿ ಸಂಭ್ರಮಾಚರಣೆ ಭ್ರಷ್ಟ, ಜನವಿರೋಧಿ ಆಡಳಿತಕ್ಕೆ ಜನರಿಂದ ತಕ್ಕಪಾಠ: ಮಾಜಿ ಸಚಿವ ಬಿ.ಸಿ.ನಾಗೇಶ್
ತುಮಕೂರು : ಭ್ರಷ್ಟಾಚಾರ, ಹಗರಣ, ಜನವಿರೋಧಿ ಆಡಳಿತಕ್ಕೆ ದೆಹಲಿ ಜನತೆ ವಿಧಾನಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ತಿಪಟೂರಿನ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರದಲ್ಲಿತ್ತು. ಜನತೆ ಬಹಳ ನಂಬಿಕೆಯಿಟ್ಟು ಆಮ್ ಆದ್ಮಿ ಪಕ್ಷಕ್ಕೆ ಅಧಿಕಾರ ನೀಡಿದ್ದರು.
ದೆಹಲಿಯಲ್ಲಿ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಅಬಕಾರಿ ಹಗರಣದಲ್ಲಿ ಸಿಲುಕಿದ್ದ ಅಷ್ಟೂ ಜನ ಸಚಿವರನ್ನು ಸೋಲಿಸುವ ಮೂಲಕ ಜನತೆ ಎಲ್ಲರಿಗೂ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವ ಎಲ್ಲರಿಗೂ ದೆಹಲಿ ಚುನಾವಣೆ ಒಂದು ಪಾಠವಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಹಿಂದೆಂದೂ ಕಾಣದಷ್ಟು ಹಗರಣ ನಡೆಸಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಈ ನಿಟ್ಟಿನಲ್ಲಿ ಜನತೆ ಆಪ್ ಸರ್ಕಾರದ ವಿರುದ್ಧ ಮತ ಚಲಾಯಿಸಿ ಅಭಿವೃದ್ದಿ ಪರವಾದ ಭಾರತೀಯ ಜನತಾ ಪಕ್ಷಕ್ಕೆ ಅಧಿಕಾರ ನೀಡಿ ಆರ್ಶೀವದಿಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಜಯಸಾಧಿಸಿದ ಬಿಜೆಪಿಯ ಶಾಸಕರುಗಳಿಗೆ ಅಭಿನಂದನೆ ಹಾಗೂ ಬಿಜೆಪಿ ಬೆಂಬಲಿಸಿದ ದೆಹಲಿಯ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದರು.
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಎಂತಹ ಆಡಳಿತ ನೀಡುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಸರ್ಕಾರ ಇದೆಯೋ ಇಲ್ಲವೋ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದ ಅವರು, ರಾಜ್ಯ ಹಾಗೂ ದೇಶದ ಜನತೆಗೆ ಬಿಜೆಪಿ ಪಕ್ಷದ ಮೇಲೆ ಮತ್ತಷ್ಟು ನಂಬಿಕೆ ಹೆಚ್ಚಾಗಿರುವುದಕ್ಕೆ ದೆಹಲಿ ಫಲಿತಾಂಶ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ನೀಡುವ ಸಂದೇಶವನ್ನು ಚಾಚೂ ತಪ್ಪದೇ ಪಾಲಿಸಿ, ನಡೆದುಕೊಳ್ಳುವ ಮೂಲಕ ತಾಲ್ಲೂಕಿನಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು, ತಿಪಟೂರು ಬಿಜೆಪಿ ಘಟಕದ ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್