ಹುಬ್ಬಳ್ಳಿ: ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ (29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಹಾಗೂ ಶಶಿಕಲಾ (40) ಎಂದು ಗುರುತಿಸಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗ್ಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರೆಲ್ಲರೂ ಸಾಗರದವರಾಗಿದ್ದು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು. ಮರಳಿ ಹುಬ್ಬಳ್ಳಿ ಮಾರ್ಗವಾಗಿ ಶಿವಮೊಗ್ಗ ಕಡೆ ಬರುವಾಗ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರತ್ಯೇಕ ಘಟನೆ; ಎರಡು ಕಾರುಗಳ ಮಧ್ಯ ಭೀಕರ ಅಪಘಾತದಲ್ಲಿ ಮೂವರು ಸಾವು: ಎರಡು ಕಾರುಗಳ ಮಧ್ಯೆ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ನಡೆದಿತ್ತು.
ಹಿರೇಬಾಗೇವಾಡಿ ಗ್ರಾಮದ ಅನಿಸ್ ಮುಸ್ತಾಕ್ ಸೈಯದ್ (ಕಾರ್ ಚಾಲಕ– 30), ಇವರ ಪತ್ನಿ ಅಯಿಮಾನ್ ಅನಿಸ್ ಸೈಯದ್(24), ಪುತ್ರ ಅಹ್ಮದ್ ಅನಿಸ್ ಸೈಯದ್ (1.5) ಮೃತರು. ಅನಿಸ್ ಅವರ ಸಹೋದರಿ ಆಯಿಷಾ ಅನ್ವರ್ ಸೈಯದ್ ತೀವ್ರ ಗಾಯಗೊಂಡಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಐವರು ಕಾರಿನಲ್ಲಿ ಗೋಕಾಕದಿಂದ ತಮ್ಮೂರು ಹಿರೇಬಾಗೇವಾಡಿಗೆ ಬರುತ್ತಿದ್ದರು. ಆಗ ಎದುರಿಗೆ ಎರಡು ಕಾರುಗಳು ಬರುತ್ತಿದ್ದವು. ಒಂದು ಕಾರು ಮತ್ತೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮೃತರ ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಕಾರಿನಲ್ಲಿ ಸವದತ್ತಿ ಕ್ಷೇತ್ರದ ಮಾಜಿ ಶಾಸಕ ಆರ್. ವಿ. ಪಾಟೀಲ್ ಅವರ ಕಾರು ಎಂದು ಬರೆದ ಪತ್ರ ಸಿಕ್ಕಿದೆ. ಇದರಲ್ಲಿದ್ದ ಮಾಜಿ ಶಾಸಕರ ಪುತ್ರ ಹಾಗೂ ಇನ್ನೊಬ್ಬ ಸವಾರನಿಗೂ ಗಾಯಗಳಾಗಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.




