ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊ*ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಂತಕನ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಆರೋಪಿ ಫಯಾಜ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು (ಆ.4) ನಡೆಸಿರುವ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಸತ್ರ ಕೋರ್ಟ್ ಈ ಆದೇಶ ಮಾಡಿದ್ದಲ್ಲದೇ, ಮುಂದಿನ ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದೆ. ಅಲ್ಲದೇ ಆಗಸ್ಟ್ 6 ರಂದು ಆರೋಪಿ ಕೋರ್ಟ್ ಗೆ ಹಾಜರಾಗುವಂತೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕೊಲೆ ಪ್ರಕರಣದಲ್ಲಿ ಕಳೆದ ಒಂದು ವರ್ಷ 4 ತಿಂಗಳಿನಿಂದ ಫಯಾಜ್ ಜೈಲಿನಲ್ಲಿದ್ದಾನೆ. ಇನ್ನೂ ಹೈಕೋರ್ಟ್ ಗೆ ಆರೋಪಿ ಪರ ವಕೀಲರು ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಬೇಲ್ ನೀಡಿದಂತೆಯೇ ತಮಗೂ ಜಾಮೀನು ಮಂಜೂರು ಮಾಡಬೇಕು ಎಂದು ಹಂತಕ ಕೋರ್ಟ್ ಗೆ ಮನವಿ ಮಾಡಿದ್ದ ಎಂದೂ ತಿಳಿದುಬಂದಿದೆ.




