ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಉಲ್ಬಣಗೊಂಡಿರುವ ನಾಯಕತ್ವ ಬದಲಾವಣೆ ಗೊಂದಲವನ್ನು ಆದಷ್ಟು ಬೇಗ ನಿವಾರಿಸಲಾಗುವುದು ಎಂದು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಈ ಬಗ್ಗೆ ಡಿಸಿಎಂ ಡಿಕೆಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ.
ಈ ಬಗ್ಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಹಳ ಸಂತೋಷ” ಅವರ ಮಾತನ್ನು ಸ್ವಾಗತಿಸುತ್ತೇನೆ ಎಂದು ಖರ್ಗೆ ನೀಡಿರುವ ಆಶ್ವಾಸನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ ಸಿಎಂ ಸೋಶಿಯಲ್ ಮೀಡಿಯಾ ಪೋಸ್ಟ್ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಇದೇ ವೇಳೆ ಬಾಗಲಕೋಟೆ ಕಲ್ಲುತೂರಾಟ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಾವು ಅಸ್ಸಾಂ ಸಭೆಗಳಿಂದ ತಡವಾಗಿ ವಾಪಸ್ಸಾಗಿರುವುದರಿಂದ ಆ ಘಟನೆಯ ಸಂಪೂರ್ಣ ವಿವರ ತಿಳಿದಿಲ್ಲ, ವರದಿ ಪಡೆದು ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ. ಶಾಸಕ ಧೀರಜ್ ಮುನಿರಾಜ್ ಅನುದಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ ನಂತರ ಮಾತನಾಡುವುದಾಗಿ ಉತ್ತರಿಸಿದರು.




