ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವಿನ ಪ್ರಕರಣ ಅತ್ಯಂತ ದುಃಖದ ಹಾಗೂ ನೋವಿನ ಸಂಗತಿಯಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಒಂದು ತಾಯಿ ಹುಲಿ ಹಾಗೂ ನಾಲ್ಕು ಹುಲಿಮರಿಗಳು ಮೃತಪಟ್ಟಿವೆ. ಘಟನೆ ನಡೆದ ಕೂಡಲೇ ಉನ್ನತ ತನಿಖೆಗೆ ಆದೇಶ ನೀಡಿದ್ದೇನೆ.
ಪ್ರಾಥಮಿಕ ವರದಿಯಂತೆ ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಶಿಷ್ಟಾಚಾರವಿದ್ದು, ಅದರಂತೆ ಮರಣೋತ್ತರ ಪರೀಕ್ಷೆ ನಡೆಸಲಾಗುವುದು.
ಎಲ್ಲಾ ವನ್ಯಜೀವಿಧಾಮಗಳಲ್ಲಿ ಗಸ್ತು ಬಲಪಡಿಸಲಾಗುವುದು. ಕಟ್ಟುನಿಟ್ಟಾಗಿ ಕೆಲಸ ಮಾಡುವಂತೆ ಜಾಗೃತ ದಳಕ್ಕೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.
ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರು ಹುಲಿ ಯೋಜನೆ(ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ.
ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ ಒಂದೇ ದಿನ ನಾಲ್ಕು ಹುಲಿಗಳು ಸಾವನ್ನಪ್ಪಿರುವುದು ಅತ್ಯಂತ ನೋವು ತಂದಿದೆ. ಕೂಡಲೇ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ ಸ್ಥಳ ತನಿಖೆ ಕೈಗೊಂಡು ಅರಣ್ಯ ಸಿಬ್ಬಂದಿ ನಿರ್ಲಕ್ಷ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ ವಿಷ ಪ್ರಾಶನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು ಮೂರು ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.




