ಕಲಬುರಗಿ: ರಾಜ್ಯ ಸರ್ಕಾರ ಭರವಸೆ ನೀಡಿರುವ 56,432 ಖಾಲಿ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ವತಿಯಿಂದಉದ್ಯೋಗಾಕಾಂಕ್ಷಿಗಳು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಕೈಯಲ್ಲಿ ಭಿತ್ತಿಪತ್ರ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಮಾತನಾಡಿ, “ಕೆಪಿಎಸ್ಸಿಯ ಎಲ್ಲಾ ವಿವಾದಿತ ನೇಮಕಾತಿಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದ 56,432 ಹುದ್ದೆಗಳಿಗೆ ತಕ್ಷಣ ಅಧಿಸೂಚನೆ ಹೊರಡಿಸಿ, 8 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು” ಎಂದು ಆಗ್ರಹಿಸಿದರು.
ಕಲಬುರಗಿಯನ್ನು ಐಟಿ ಹಬ್ ಮತ್ತು ಸ್ಟಾರ್ಟ್ಅಪ್ ಕೇಂದ್ರವಾಗಿ ಘೋಷಿಸುವುದು, ಕಲಬುರಗಿ ವಿಶ್ವವಿದ್ಯಾಲಯದ ಫಲಿತಾಂಶ ಪ್ರಕಟಣೆಗೆ ಹಾಗೂ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಕಾಲಮಿತಿ ನಿಗದಿ ಮಾಡುವುದು, ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಯೋಮಿತಿಯನ್ನು ಶಾಶ್ವತವಾಗಿ ಹೆಚ್ಚಿಸುವುದು ಸೇರಿ ಹಲವು ಬೇಡಿಕೆಗೆ ಒತ್ತಾಯಿಸಿದರು.
ಒಂದು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತೇವೆ ಎಂದು ಭರವಸೆ ನೀಡಿದ ಸರ್ಕಾರ ಮಾತು ತಪ್ಪಿದೆ. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಉಪಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಉಪಾಧ್ಯಕ್ಷ ಶ್ರೇಯಾಸ್ ಎಂ.ಎಸ್., ಪ್ರಧಾನ ಕಾರ್ಯದರ್ಶಿ ಸಂಜಯಕುಮಾರ್, ಎಸ್.ಎಂ.ಸಿದ್ದೇಶ, ಶ್ರೀಶೈಲ್ ತೇಲಿ, ಅರ್ಜುನ ಝಳಕಿ, ಈರಣ್ಣ ಸಲಗರ, ಸಂತೋಷ ಬೆಳಮಗಿ, ಅನೀಲಕುಮಾರ ನಾಯ್ಕೋಡಿ, ಆಂದೋಲಾ ಸಿದ್ದಲಿಂಗ ಸ್ವಾಮೀಜಿ, ಎಂ.ಎಸ್.ಪಾಟೀಲ್ ನರಿಬೋಳ, ಬಿಜೆಪಿ ಮುಖಂಡ ಚಂದು ಪಾಟೀಲ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




