ಚೇಳೂರು: ಗ್ರಾಮದಲ್ಲಿ ಸುಮಾರು 350ಕ್ಕೂ ಹೆಚ್ಚು ಮನೆಗಳಿದ್ದು, ಅನೇಕ ಕುಟುಂಬಗಳಿಗೆ ಸ್ವಂತ ನಿವೇಶನಗಳಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಒಂದು ಸುಸಜ್ಜಿತ ಸಮುದಾಯ ಭವನ ಹಾಗೂ ಅಂಬೇಡ್ಕರ್ ಪ್ರತಿಮೆಯ ಅಗತ್ಯವಿದೆ ಎಂದು ಕದಸಂಸ ಜಿಲ್ಲಾ ಸಂಚಾಲಕರು ಕಡ್ಡಿಲು ವೆಂಕಟರವಣಪ್ಪ ಅವರು ಶಾಸಕರಲ್ಲಿ ಮನವಿ ಮಾಡಿದರು.
ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಶ್ರೀರಾಮನವಮಿ ಪ್ರಯುಕ್ತ ಕರಗ ಮಹೋತ್ಸವವನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸೇರಿದಂತೆ ಗಣ್ಯರು ಉದ್ಘಾಟಿಸಿ ಮಾತನಾಡಿದರು.
ಹಿಂದೆ ಕರೋನಾ ಸಂದರ್ಭದಲ್ಲಿ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಶಾಸಕರು ₹8.5 ಲಕ್ಷ ಅನುದಾನ ನೀಡಿ ಬೋರ್ವೆಲ್ ವ್ಯವಸ್ಥೆ ಮಾಡಿಸಿದ್ದನ್ನು ಕೃತಜ್ಞತೆಯಿಂದ ಸ್ಮರಿಸಿದರು.

ಗ್ರಾಮಸ್ಥರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅವರು, ಮುಂದಿನ ಮೂರು ತಿಂಗಳ ಒಳಗಾಗಿ ₹50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲಾಗುವುದು.
ನಿವೇಶನ ರಹಿತರಿಗೆ ಸೈಟುಗಳನ್ನು ಹಂಚಿಕೆ ಮಾಡಲು ಅರ್ಹರ ಪಟ್ಟಿಯನ್ನು ಸಿದ್ಧಪಡಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾಲೋನಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಿಗೆ ಹೂವಿನ ಹಾರ ಹಾಕಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ಶ್ರೀನಿವಾಸ್ ಎಂ., ಮುಖಂಡರಾದ ಸಾಹುಕಾರ್ ಶ್ರೀನಿವಾಸ್, ಪಿ.ಆರ್. ಚಲಂ, ಜೆ.ಎನ್. ಜಾಲರಿ, ಸುರೇಂದ್ರ, ಸಹದೇವ ರೆಡ್ಡಿ, ರಾಮಾಂಜನೇಯ ರೆಡ್ಡಿ, ಗಂಗಾಧರ, ಚಂದ್ರ, ಕೆಪಿಸಿಸಿ ಮುಖಂಡರಾದ ಪ್ರೆಮ್ ಕುಮಾರ್, ಕಿರಣ್, ಶ್ರೀನಾಥ್, ಅಲ್ಪಸಂಖ್ಯಾತ ಮುಖಂಡರಾದ ಅಝರುದ್ದಿನ್,ಮಂಜುನಾಥ ಪಿ., ಸೇರಿದಂತೆ ಅನೇಕ ಗಣ್ಯರು ಹಾಗೂ ನೂರಾರು ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ :ಯಾರಬ್. ಎಂ.




