ರಾಯಚೂರು: ಆಗಸ್ಟ್ 27: ವಾಲ್ಮೀಕಿ ಸಮಾಜಕ್ಕೆ ನ್ಯಾಯಯುತವಾಗಿ ದೊರಕಬೇಕಾದ 7.5% ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಿ ಕಾನೂನು ರಕ್ಷಣೆ ನೀಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶರಣಬಸವ ನಾಯಕ ಜಾನೇಕಲ್ ಒತ್ತಾಯಿಸಿದರು.
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ವತಿಯಿಂದ ಆಯೋಜಿಸಿದ್ದ ವಾಲ್ಮೀಕಿ ಸಮಾಜದ ಮಹತ್ವದ ಸಭೆಯಲ್ಲಿ ಅವರು ಮಾತನಾಡಿದರು.
ವಾಲ್ಮೀಕಿ ಸಮಾಜದ ಬಹುದಿನಗಳ ಬೇಡಿಕೆಯಾಗಿರುವ 7.5% ಮೀಸಲಾತಿಗೆ ಸೂಕ್ತ ಕಾನೂನು ರಕ್ಷಣೆ ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ 7.5% ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಸಮಾಜದ ಮುಖಂಡರು, ಯುವಕರು ಹಾಗೂ ಪದಾಧಿಕಾರಿಗಳು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಶರಣಬಸವ ನಾಯಕ ಹೇಳಿದರು.
ಸಮಾಜದ ಹಕ್ಕುಗಳ ರಕ್ಷಣೆಯ ಜೊತೆಗೆ ಸಮುದಾಯದ ಮಕ್ಕಳ ಭವಿಷ್ಯ ರೂಪಿಸುವಲ್ಲಿಯೂ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಉನ್ನತ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರನ್ನು ಶೈಕ್ಷಣಿಕವಾಗಿ ಬಲಪಡಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಆರ್. ತುಳಸಿರಾಮ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ವಾಲ್ಮೀಕಿ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಯುವಕರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಸಮುದಾಯದ ಹಕ್ಕುಗಳಿಗಾಗಿ ಸಂಘಟಿತವಾಗಿ ಧ್ವನಿ ಎತ್ತುವ ಅಗತ್ಯದ ಕುರಿತು ಮಾತನಾಡಿದರು.
ಸಭೆಯಲ್ಲಿ 7.5% ಮೀಸಲಾತಿಯನ್ನು 9ನೇ ಅನುಸೂಚಿಗೆ ಸೇರಿಸುವುದು, ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವುದು, ಯುವಕರಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಸಮಾಜದ ಸಂಘಟನೆಯನ್ನು ಬಲಪಡಿಸುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಿತು.
ಕಾರ್ಯಕ್ರಮಕ್ಕೆ ಗೊಲ್ಲಪಲ್ಲಿ ವರದಾನೇಶ್ವರ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ ದೇವನಪಲ್ಲಿ, ಸಮಾಜದ ಹಿರಿಯ ಮುಖಂಡರಾದ ಬುಡ್ಡಪ್ಪ ನಾಯಕ, ನರೇಂದ್ರ ನಾಯಕ, ಅರುಣ್ ದೊರೆ, ಪಕೀರಪ್ಪ ರಾಮತ್ನಾಳ, ಮೌನೇಶ್ ಕಣ್ಣೂರ್, ಮಲ್ಲಯ್ಯ ಗೋನ್ವಾರ್, ಬಸನಗೌಡ ಮೇಟಿ, ಬುದ್ಧಯ್ಯ ದೇವದುರ್ಗ, ಉದಯ್ ರಾಜೊಳ್ಳಿ, ಮಹೇಶ ಬೆಟ್ಟದೂರು, ವೀರೇಶ ನಾಯಕ ರಾಯಚೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ವರದಿ :ಆಂಜನೇಯ ನಸಲಾಪುರ


