ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಜರಂಗದಳ ಸಂಘಟನೆಯ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ನ ಸಂಗ್ರೂರು ಜಿಲ್ಲಾ ನ್ಯಾಯಾಲಯವು 15,000 ರೂಪಾಯಿಗಳ ಜಾಮೀನು ಸಹಿತ ಬಂಧನ ವಾರಂಟ್ (Bailable Warrant) ಹೊರಡಿಸಿದೆ.
2023ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಈ ಮಹತ್ವದ ಆದೇಶ ಹೊರಬಿದ್ದಿದ್ದು, ಬರುವ ಸೆಪ್ಟೆಂಬರ್ 19 ರಂದು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಪ್ರಕರಣದ ಹಿನ್ನೆಲೆಯೇನು?
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಹಾಗೂ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆಗಳಲ್ಲಿ ಬಜರಂಗದಳದ ವಿರುದ್ಧ ಪ್ರಸ್ತಾಪಿಸಲಾಗಿತ್ತು. ಇದರಿಂದ ಹಿಂದೂ ಸಂಘಟನೆಗಳು ಹಾಗೂ ಅವರ ಬೆಂಬಲಿಗರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಪಂಜಾಬ್ನ ಸಂಗ್ರೂರಿನ ನಿವಾಸಿ ಹಿತೇಶ್ ಭಾರದ್ವಾಜ್ ಎಂಬುವವರು ನ್ಯಾಯಾಲಯದ ಮೆಟ್ಟಿಲೇರಿದ್ದರು.


