ಹುಬ್ಬಳ್ಳಿ: ಕಲಬುರಗಿಯಿಂದ ಧಾರವಾಡಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್ನಲ್ಲೇ ಪ್ರಯಾಣಿಕರೊಬ್ಬರು ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ದುಃಖದ ಘಟನೆ ಸಂಭವಿಸಿದೆ. ಧಾರವಾಡ ಮೂಲದ ಶಿಕ್ಷಕ ಸತೀಶ್ ಮರಬ್ಬ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಶಿಕ್ಷಕ ಸತೀಶ್ ಅವರು ಕಲಬುರಗಿಯಿಂದ ಹುಬ್ಬಳ್ಳಿಯ ಮಾರ್ಗವಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ ಚಲಿಸುತ್ತಿದ್ದಾಗಲೇ ಅವರಿಗೆ ಏಕಾಏಕಿ ತೀವ್ರವಾಗಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಸತೀಶ್ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗುತ್ತಿರುವುದನ್ನು ಗಮನಿಸಿದ ಬಸ್ ಚಾಲಕ, ತಕ್ಷಣವೇ ಸಮಯಪ್ರಜ್ಞೆ ಮೆರೆದು ವಾಹನವನ್ನು ನೇರವಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಯ ಕಡೆಗೆ ಚಲಾಯಿಸಿದ್ದಾರೆ.
ಚಾಲಕ ಸಕಾಲದಲ್ಲಿ ಆಸ್ಪತ್ರೆಗೆ ತಲುಪಿಸಲು ಶ್ರಮಿಸಿದರೂ ಸಹ, ಚಿಕಿತ್ಸೆ ಸಿಗುವ ಮುನ್ನವೇ ಸತೀಶ್ ಅವರು ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು ಹಾಗೂ ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಮಾಹಿತಿಗಳನ್ನು ಕಲೆಹಾಕುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


