ಚೇಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಚೇಳೂರು ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಎಸ್ಸಿ, ಎಸ್ಟಿ ಕುಂದುಕೊರತೆ ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳು, ಅಹವಾಲುಗಳು ಹಾಗೂ ಸಲಹೆಗಳನ್ನು ಅಧಿಕಾರಿಗಳು ಆಲಿಸಿ ಸ್ವೀಕರಿಸಿದರು. ಸಮುದಾಯದ ಜನರು ಎದುರಿಸುತ್ತಿರುವ ಸಾಮಾಜಿಕ, ಕಾನೂನಾತ್ಮಕ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಪ್ರಮುಖರಾದ ಕಡ್ಡಿಲು ವೆಂಕಟರವಣಪ್ಪ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪೊಲೀಸ್ ಇಲಾಖೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಅದೇ ರೀತಿ ಖಾಸಗಿ ಶಾಲೆಗಳಲ್ಲಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಾರೆ, ಸರ್ಕಾರ ನಿಗದಿತ ಆದೇಶದಂತೆ ಶುಲ್ಕ ವನ್ನು ವಸೂಲಿ ಮಾಡಲು ಒತ್ತಾಯಿಸಿದರು.
ಠಾಣೆಗೆ ಬರುವ ಸಾರ್ವಜನಿಕರಿಗೆ ಗೌರವಯುತ ಸೇವೆ ನೀಡುವ ಜೊತೆಗೆ ಅವರ ದೂರುಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವ ಮೂಲಕ ಜನರಲ್ಲಿ ಭದ್ರತೆಯ ಭಾವನೆ ಮೂಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಚೇಳೂರು ವೃತ್ತ ನಿರೀಕ್ಷಕ ಶ್ರೀನಿವಾಸ್ ಎಂ., ಸಮಾಜದ ಎಲ್ಲ ವರ್ಗಗಳ ರಕ್ಷಣೆ ಮತ್ತು ಹಕ್ಕುಗಳ ಜಾರಿಗೆ ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳು ಮತ್ತು ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಚೌಕಟ್ಟಿನಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಯಾವುದೇ ರೀತಿಯ ದೌರ್ಜನ್ಯ, ಅನ್ಯಾಯ ಅಥವಾ ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ ಸಚಿನ್, ಪ್ರಶಾಂತ್ ವಾಲಿ, ಬೀರಣ್ಣ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಸಮುದಾಯದ ಜನರ ಹಕ್ಕುಗಳ ರಕ್ಷಣೆಗೆ ಇಲಾಖೆ ಬದ್ಧ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರು ನೀಡಿರುವ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಚೌಕಟ್ಟಿನಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾವುದೇ ರೀತಿಯ ಅನ್ಯಾಯ ಅಥವಾ ದೌರ್ಜನ್ಯ ನಡೆದರೆ ಸಾರ್ವಜನಿಕರು ನಿರ್ಭಯವಾಗಿ ಪೊಲೀಸರನ್ನು ಸಂಪರ್ಕಿಸಬಹುದು.
— ಶ್ರೀನಿವಾಸ್ ಎಂ., ವೃತ್ತ ನಿರೀಕ್ಷಕ (ಸಿಪಿಐ), ಚೇಳೂರು.
ವರದಿ :ಯಾರಬ್. ಎಂ.


