ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ(50) ಅವರ ಹಠಾತ್ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಮೊಮ್ಮಗ. ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಹೃದಯಾಘಾತದಿಂದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಿಎಂ ಸಂತಾಪ:
ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ನನ್ನ ಆತ್ಮೀಯ ಸಹೋದ್ಯೋಗಿ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.
ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಅನನ್ಯವಾದದ್ದು. ಕಾರ್ಯಕರ್ತರೊಂದಿಗೆ ಸದಾ ಉತ್ತಮ ಬಾಂಧವ್ಯ ಹೊಂದಿದ್ದ ಒಬ್ಬ ಸಕ್ರಿಯ ನಾಯಕನನ್ನು ಇಂದು ನಾವು ಕಳೆದುಕೊಂಡಿದ್ದೇವೆ.
ಈ ಕಷ್ಟದ ಸಮಯದಲ್ಲಿ ಭಗವಂತನು ಅವರ ಕುಟುಂಬದ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ವೇದನೆಯನ್ನು ಸಹಿಸುವ ಧೈರ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

