ಹುಬ್ಬಳ್ಳಿ : ಹುಬ್ಬಳ್ಳಿ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ.
ನಗರದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿರುವ ಅವರಿಗೆ, ವಿಶ್ರಾಂತಿ ಪಡೆಯುತ್ತಿರುವಾಗಲೇ ಅನಾರೋಗ್ಯ ಕಾಡಿದ್ದು, ಹೋಟೆಲ್ನಲ್ಲಿಯೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.
ಅಮಿತ್ ಶಾ ಅವರ ಜೊತೆಯಲ್ಲೇ ಆಗಮಿಸಿರುವ ವೈದ್ಯರ ವಿಶೇಷ ತಂಡ ಅವರಿಗೆ ಚಿಕಿತ್ಸೆ ಮುಂದುವರಿಸಿದೆ.
ವೈದ್ಯಕೀಯ ತಂಡದಲ್ಲಿರುವ ಡಾ. ಅರುಣ್ ಪ್ರತಾಪ್ ಅವರು ಗೃಹ ಸಚಿವರ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಆರೈಕೆ ಒದಗಿಸುತ್ತಿದ್ದಾರೆ. ಸದ್ಯ ಹೋಟೆಲ್ನಲ್ಲೇ ಅವರಿಗೆ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ.
ಗೃಹ ಸಚಿವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ವಿಷಯ ತಿಳಿಯುತ್ತಿದ್ದಂತೆ, ಹಿರಿಯ ಅಧಿಕಾರಿಗಳು ಹೋಟೆಲ್ಗೆ ದೌಡಾಯಿಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭುವನೇಶ ಪಾಟೀಲ್ ಹಾಗೂ ಐಜಿಪಿ ಲಾಬುರಾಮ್ ಅವರು ಹೋಟೆಲ್ಗೆ ಭೇಟಿ ನೀಡಿ, ಪರಿಸ್ಥಿತಿಯ ಮೇಲ್ವಿಚಾರಣೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಅಮಿತ್ ಶಾ ಅವರಿಗೆ ಸುಮಾರು ಎರಡು ಗಂಟೆಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ವೈದ್ಯರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹೋಟೆಲ್ನಲ್ಲಿಯೇ ಚಿಕಿತ್ಸೆ ಹಾಗೂ ಅಗತ್ಯ ವಿಶ್ರಾಂತಿಯ ಬಳಿಕ, ಅವರು ತಮ್ಮ ಮುಂದಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಹುಬ್ಬಳ್ಳಿಯಿಂದ ನೇರವಾಗಿ ನವದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ ಎಂದು ಮಾಹಿತಿ ಲಭ್ಯವಾಗಿದೆ.


