ಬಾಗಲಕೋಟೆ : ನಗರದಲ್ಲಿ (Bagalakote) ಅಕ್ರಮ ಆರೋಪಿಸಿ ಬಿಜೆಪಿ (BJP) ಮತ್ತು ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ನಿವಾಸಿಗಳಿಗೆ ಶಬ್ದ ಮಾಲಿನ್ಯದಿಂದ ತೊಂದರೆಯಾಗುತ್ತಿದ್ದು, ಅನುಮತಿ ಇಲ್ಲದೆ ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಯಾವುದೇ ಅಧಿಕೃತ ಪುರಾವೆ ಮತ್ತು ಅನುಮತಿಯಿಲ್ಲದೆ ಅಕ್ರಮವಾಗಿ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಿದ ಮುಖಂಡರು, ಸಂಬಂಧಪಟ್ಟ ಆಡಳಿತ ಮಂಡಳಿ ಮತ್ತು ಧ್ವನಿವರ್ಧಕಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಹಾಗೂ ಪೊಲೀಸ್ ವೃತ್ತದ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸುಪ್ರೀಂ ಕೋರ್ಟ್ ಮತ್ತು ಸರ್ಕಾರದ ಶಬ್ದ ಮಾಲಿನ್ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ನಿಯಮ ಉಲ್ಲಂಘಿಸುವ ಮೈಕ್ ಸಹಿತ ಧ್ವನಿವರ್ಧಕಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದರು.ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.


