ಚಿಂಚೋಳಿ : ಕಮಲಾಪುರ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ವಿ.ಕೆ. ಸಲಗರ ಗ್ರಾಮದಲ್ಲಿ ಬುಧವಾರ ರಾತ್ರಿ ಸುಮಾರು 9 ಗಂಟೆಗೆ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಅಯ್ಯಂಗಾರ್ ಬೆಂಗಳೂರು ಬೇಕರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಬೇಕರಿಯ ಮಾಲೀಕರಾದ ಮಂಜುನಾಥ್ ತಂದೆ ಕಾಶಿನಾಥ್ ಅವರ ಪ್ರಕಾರ, ಅಗ್ನಿ ಅವಘಡದಿಂದ ಬೇಕರಿಯಲ್ಲಿದ್ದ ಯಂತ್ರೋಪಕರಣಗಳು, ಪೀಠೋಪಕರಣಗಳು, ಆಹಾರ ಸಾಮಗ್ರಿಗಳು ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಸುಮಾರು ₹25 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ದೀಪಕ್ ಸಲಗರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ದೀಪಕ್ ಸಲಗರ, "ಬಡ ಕುಟುಂಬದ ಜೀವನಾಧಾರವಾಗಿದ್ದ ಬೇಕರಿ ಸಂಪೂರ್ಣ ಸುಟ್ಟು ಹೋಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು" ಎಂದು ಆಗ್ರಹಿಸಿದರು.
ಇದೇ ವೇಳೆ, ಗ್ರಾಮದಲ್ಲಿ ವಿದ್ಯುತ್ ತಂತಿಗಳ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬ ಆರೋಪ ಕೇಳಿಬಂದಿದ್ದು, ವಿದ್ಯುತ್ ಇಲಾಖೆ ಅಧಿಕಾರಿಗಳು ಸಡಿಲಗೊಂಡಿರುವ ತಂತಿಗಳು ಹಾಗೂ ವಿದ್ಯುತ್ ವ್ಯವಸ್ಥೆಯನ್ನು ತಕ್ಷಣ ದುರಸ್ತಿಪಡಿಸಿ ಇಂತಹ ಅವಘಡಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಜೊತೆಗೆ, ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ಸಂತ್ರಸ್ತರಿಗೆ ಅಗತ್ಯ ನೆರವು ಹಾಗೂ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
ವರದಿ : ಸುನಿಲ್ ಸಲಗರ


