ತುರುವೇಕೆರೆ: ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ಕೆರೆಯ ಹೂಳೆತ್ತುವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಕೆರೆ ಹೂಳೆತ್ತುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಮಾತನಾಡಿ, ಧರ್ಮಸ್ಥಳವು ಚರ್ತುವಿಧ ದಾನಗಳಿಗೆ ಹೆಸರಾಗಿದೆ. ಇದಲ್ಲದೆ ಪೂಜ್ಯರ ದೂರದೃಷ್ಟಿಯ ಫಲವಾಗಿ ನಾಲ್ಕು ದಶಕಗಳ ಹಿಂದೆ ಸ್ಥಾಪಿಸಿ ಗ್ರಾಮಾಭಿವೃದ್ದಿ ಯೋಜನೆಯಿಂದ ರಾಜ್ಯದ ಬಹುತೇಕ ಹಳ್ಳಿಗಳು ಮಾದರಿ ಗ್ರಾಮಗಳಾಗಿ ಗುರುತಿಸಿಕೊಂಡಿದೆ. ಯೋಜನೆಯ ಮೂಲಕ ಹಾಲು ಉತ್ಪಾದಕರ ಸಂಘದ ನಿರ್ಮಾಣಕ್ಕೆ, ಶಾಲೆಗಳ ಪೀಠೋಪಕರಣಗಳಿಗೆ ಅನುದಾನ, ಅತಿಥಿ ಶಿಕ್ಷಕರ ನೆರವು, ಸ್ವಸಹಾಯ ಸಂಘದ ಮಕ್ಕಳ ವೃತ್ತಿಪರ ಶಿಕ್ಷಣಕ್ಕೆ ಸುಜ್ಞಾನ ನಿಧಿ ಯೋಜನೆಯಲ್ಲಿ 400 ರಿಂದ 1000 ರೂವರೆಗೆ ಶಿಷ್ಯವೇತನ, ವಾತ್ಸಲ್ಯ ಕಾರ್ಯಕ್ರಮದಡಿ ನಿರ್ಗತಿಕರಿಗೆ ಪ್ರತಿ ತಿಂಗಳು ಮಾಸಾಶನ, ಸೂರಿಲ್ಲದವರಿಗೆ ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದೆ ಎಂದರು.

ಯೋಜನೆಯು ಕಳೆದ 10 ವರ್ಷದಿಂದ ನಮ್ಮೂರು ನಮ್ಮ ಕೆರೆ ಯೋಜನೆಯಡಿ ರಾಜ್ಯದ ಸುಮಾರು ಸಾವಿರಕ್ಕೂ ಅಧಿಕ ಕೆರೆಗಳ ಹೂಳೆತ್ತಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚುವಂತೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಿದೆ. ಕೆರೆ ಹೂಳೆತ್ತುವುದರಿಂದ ಅಂತರ್ಜಲ ವೃದ್ದಿಯಾಗುವುದರ ಜೊತೆಗೆ ರೈತರ ಕೃಷಿ ಚಟುವಟಿಕೆಗೆ, ಜನಜಾನುವಾರುಗಳಿಗೆ ನೀರಿನ ಲಭ್ಯತೆ ಹೆಚ್ಚುತ್ತದೆ ಎಂದ ಅವರು, ಕೆರೆ ಹೂಳೆತ್ತುವ ಕಾರ್ಯಕ್ಕೆ ಗ್ರಾಮಸ್ಥರ ಸಹಕಾರ ಅತ್ಯಗತ್ಯವಾಗಿದೆ ಎಂದರು.
ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ, ಕೆರೆ ಹೂಳೆತ್ತುವ ಸಮಿತಿ ಅಧ್ಯಕ್ಷ ಸತೀಶ್ ಮಾತನಾಡಿ, ಧರ್ಮಸ್ಥಳ ಯೋಜನೆಯಿಂದ ತಾಲ್ಲೂಕಿನ ಸಾಕಷ್ಟು ಗ್ರಾಮಗಳು ಅಭಿವೃದ್ದಿ ಹೊಂದಿದೆ. ಮಹಿಳಾ ಸಬಲೀಕರಣ, ಆರ್ಥಿಕ ಸದೃಢತೆ, ಹತ್ತಾರು ಜನಪರ ಕಾರ್ಯಗಳಿಗೆ ಧನಸಹಾಯ, ಮಕ್ಕಳಿಗೆ ಶೈಕ್ಷಣಿಕ ನೆರವು ಸೇರಿದಂತೆ ಯೋಜನೆ ಹಲವು ಅನುಕೂಲ ಕಲ್ಪಿಸಿದೆ. ಈಗ ನಮ್ಮ ಗ್ರಾಮದ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದು, ನಮ್ಮ ಗ್ರಾಮ, ನಮ್ಮ ಕೃಷಿ ಬದುಕು ಕೆರೆಯ ನೀರನ್ನೇ ಅವಲಂಬಿಸಿರುವುದರಿಂದ ಗ್ರಾಮಸ್ಥರೆಲ್ಲರೂ ಕೆರೆ ಹೂಳೆತ್ತುವ ಕಾರ್ಯಕ್ಕೆ ಸಹಕಾರ ನೀಡುವುದು ನಮ್ಮ ಕರ್ತವ್ಯವಾಗಿದೆ. ಗ್ರಾಮದ ಪರವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ, ಯೋಜನೆಯ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯೋಜನಾಧಿಕಾರಿ ಶೇಖರ ಶೆಟ್ಟಿ, ವಿಚಕ್ಷಣಾಧಿಕಾರಿ ಗೋವರ್ಧನ್, ವಲಯ ಮೇಲ್ವಿಚಾರಕ ಶ್ರೀಕಾಂತ್, ಒಕ್ಕೂಟದ ಅಧ್ಯಕ್ಷೆ ಭಾರತಿ, ಸೇವಾಪ್ರತಿನಿಧಿ ರಂಜಿತಾ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್


