ಬೆಂಗಳೂರು: ರಾಜ್ಯಾಧ್ಯಂತ ಈದ್ ಮಿಲಾದ್ ಹಬ್ಬದ ಆಚರಣೆಯ ವೇಳೆಯಲ್ಲಿ ಡಿಜೆ ಬಳಕೆ ನಿಷೇಧಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ಈದ್ ಮಿಲಾದ್ ಸಂದರ್ಭದಲ್ಲಿ ಡಿಜೆಗೆ ಬ್ರೇಕ್ ಹಾಕಲಾಗಿದೆ.
ಈ ಸಂಬಂಧ ಆಯಾ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಆಗಸ್ಟ್.25ರ ಇಂದಿನಿಂದಲೇ ಜಾರಿಗೆ ಬರುವಂತೆ ಆಗಸ್ಟ್.28ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆ ಮಾಡದಂತೆ ನಿಷೇಧ ಹೇರಲಾಗಿದೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಟ್ಟು ನಿಟ್ಟಿನ ಆದೇಶ
ಜಿಲ್ಲೆಯಾದ್ಯಂತ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸೌಹಾರ್ದತೆಯನ್ನು ಕಾಪಾಡುವ ದೃಷ್ಟಿಯಿಂದ ಈದ್ ಮಿಲಾದ್ ಹಬ್ಬ ಮತ್ತು ಮೆರವಣಿಗೆಯ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಿನ ನಿರ್ಬಂಧ
ಆಗಸ್ಟ್ 26ರಂದು ಜಿಲ್ಲೆಯಾದ್ಯಂತ ಈದ್ ಮಿಲಾದ್ ಆಚರಣೆ ನಡೆಯಲಿದ್ದು, ಹಬ್ಬದ ಮುಕ್ತಾಯದವರೆಗೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಆಗಸ್ಟ್ 28ರವರೆಗೆ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಂ ಬಳಕೆಯ ಮೇಲಿನ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.


