ಬೆಳಗಾವಿ: ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾ ಆಕ್ಟಿವಿಸ್ಟ್ಗಳ ಹೆಸರಿನಲ್ಲಿ ಸಾರ್ವಜನಿಕರನ್ನು ಮತ್ತು ಸರ್ಕಾರಿ ಅಧಿಕಾರಿಗಳನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ದೊಡ್ಡದೊಂದು ಜಾಲಕ್ಕೆ ಬ್ರೇಕ್ ಹಾಕಲು ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ ಈಗ ಕಠಿಣ ಕಾನೂನು ಅಸ್ತ್ರವನ್ನು ಕೈಗೆತ್ತಿಕೊಂಡಿದೆ.
ಮಾಧ್ಯಮಗಳ ಹೆಸರಿನಲ್ಲಿ ಸಮಾಜದಲ್ಲಿ ಕಾನೂನುಬಾಹಿರ ಕೃತ್ಯ ಎಸಗುತ್ತಿರುವ ನಕಲಿ ಪತ್ರಕರ್ತರಿಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ಕೆ. ರಾಮರಾಜನ್ ಅವರು ನೇರವಾಗಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಬ್ಲ್ಯಾಕ್ಮೇಲ್ ಮಾಡುವವರ ವಿರುದ್ಧ ಇನ್ಮುಂದೆ 'ರೌಡಿಶೀಟ್' ದಾಖಲಿಸುವುದಾಗಿ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಅಧಿಕಾರಿಗಳು, ರೈತರೇ ಇವರ ಟಾರ್ಗೆಟ್!
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಯೂಟ್ಯೂಬ್ ಚಾನೆಲ್ ಹಾಗೂ ಸಾಮಾಜಿಕ ಜಾಲತಾಣಗಳ ಹೆಸರಿನಲ್ಲಿ ಕೆಲವರು ತಾವೇ ಪತ್ರಕರ್ತರೆಂದು ಬಿಂಬಿಸಿಕೊಳ್ಳುತ್ತಿದ್ದಾರೆ.
ಮುಗ್ಧ ರೈತರಿಂದ ಹಿಡಿದು ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳವರೆಗೆ ಎಲ್ಲರನ್ನೂ ಟಾರ್ಗೆಟ್ ಮಾಡಿ, ತೇಜೋವಧೆ ಮಾಡುವ ಬೆದರಿಕೆ ಒಡ್ಡಿ ಹಣ ವಸೂಲಿ ಮಾಡುವ ದಂಧೆ ವ್ಯಾಪಕವಾಗಿ ನಡೆಯುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ.


