ರಾಯಚೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅಧಿಕೃತ ಚಾಲನೆ ಸಿಕ್ಕಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು ಹಾಗೂ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸಾಂಪ್ರದಾಯಿಕವಾಗಿ ಕಹಳೆ ಊದುವ ಮೂಲಕ ಪಾದಯಾತ್ರೆಯನ್ನು ಉದ್ಘಾಟಿಸಿದರು.
ಸರ್ಕಾರದ ವಿರುದ್ಧ ತನ್ನ ತೀವ್ರ ಆಕ್ರೋಶವನ್ನು ಹೊರಹಾಕಲು ಬಿಜೆಪಿ ಈ ಬೃಹತ್ ಹೋರಾಟವನ್ನು ಹಮ್ಮಿಕೊಂಡಿದ್ದು, ರಾಯಚೂರಿನಿಂದ ಬಳ್ಳಾರಿಯವರೆಗೆ ಒಟ್ಟು 175 ಕಿಲೋಮೀಟರ್ಗಳ ಪಾದಯಾತ್ರೆ ನಡೆಯಲಿದೆ. ಚಾಲನೆ ಕಾರ್ಯಕ್ರಮದ ವೇದಿಕೆಯಲ್ಲಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜನಾರ್ದನ ರೆಡ್ಡಿ, ಜಗದೀಶ್ ಶೆಟ್ಟರ್, ಸಿ.ಟಿ. ರವಿ ಸೇರಿದಂತೆ ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಉಪಸ್ಥಿತರಿದ್ದು, ಸರ್ಕಾರದ ವಿರುದ್ಧ ಕ್ರಾಂತಿಕಾರಿ ಹೋರಾಟದ ಮುನ್ಸೂಚನೆ ನೀಡಿದರು.


