ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿರುವ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಬರುವ ಸೋಮವಾರ ಅಂದರೆ ಜುಲೈ 20 ರಂದು ಹೊಸ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಬಲವಾದ ಸಾಧ್ಯತೆಗಳಿವೆ.
ಇಂದೇ ದೆಹಲಿಯಲ್ಲಿ ಹೈಕಮಾಂಡ್ ಮಹಾಸಭೆ
ಸಂಪುಟ ಕಸರತ್ತನ್ನು ಅಂತಿಮಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಬುಧವಾರ ರಾತ್ರಿಯೇ ತಮ್ಮದೇ ಆದ ಪ್ರತ್ಯೇಕ ಪಟ್ಟಿಗಳೊಂದಿಗೆ ದೆಹಲಿ ತಲುಪಿದ್ದಾರೆ.
ಗುರುವಾರ (ಇಂದು) ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದೆ.
ಡೆಹ್ರಾಡೂನ್ ಪ್ರವಾಸ ರದ್ದುಗೊಳಿಸಿರುವ ರಾಹುಲ್ ಗಾಂಧಿ ಅವರೂ ಈ ಸಭೆಯಲ್ಲಿ ಭಾಗವಹಿಸಿ ಅಂತಿಮ ಪಟ್ಟಿಗೆ 'ಗ್ರೀನ್ ಸಿಗ್ನಲ್' ನೀಡಲಿದ್ದಾರೆ ಎನ್ನಲಾಗುತ್ತಿದೆ.
ದೆಹಲಿಗೆ ಹೊರಡುವ ಮುನ್ನ 'ಕಾವೇರಿ' ನಿವಾಸದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸುಮಾರು 40 ನಿಮಿಷಗಳ ಕಾಲ ಗೌಪ್ಯ ಮಾತುಕತೆ ನಡೆಸಿರುವುದು ಗಮನಾರ್ಹ.


