ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ಕಳೆದ ವಾರ ಅಪೂರ್ಣಗೊಂಡಿದ್ದ ವರಿಷ್ಠರ ಸಭೆಯನ್ನು ಪೂರ್ಣಗೊಳಿಸಲು ಮತ್ತು ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಒತ್ತಲು ರಾಜ್ಯ ಕಾಂಗ್ರೆಸ್ ಪ್ರಮುಖ ನಾಯಕರು ಇಂದು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಂಗಳವಾರ ಬೆಳಿಗ್ಗೆಯೇ ದೆಹಲಿಗೆ ತೆರಳಲಿದ್ದು, ಸಂಜೆ ವೇಳೆಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಪ್ರಮುಖ ಸಮಾಲೋಚನೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಚಿವಾಕಾಂಕ್ಷಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಲ್ಲಿ ಸಚಿವಾಕಾಂಕ್ಷಿಗಳ ಬೀಡು
ಸಂಪುಟ ವಿಸ್ತರಣೆ ಪಕ್ಕಾ ಎನ್ನುತ್ತಿದ್ದಂತೆ ಹಿರಿಯ ನಾಯಕರಾದ ಆರ್.ವಿ. ದೇಶಪಾಂಡೆ, ಹೆಚ್.ಕೆ. ಪಾಟೀಲ್, ಬಸವರಾಜ ರಾಯರೆಡ್ಡಿ, ತಿಮ್ಮಾಪುರ ಸೇರಿದಂತೆ ಅನೇಕ ನಾಯಕರು ಈಗಾಗಲೇ ದೆಹಲಿ ತಲುಪಿದ್ದು, ತೀವ್ರ ಕಸರತ್ತು ನಡೆಸುತ್ತಿದ್ದಾರೆ.
ಮತ್ತೊಂದೆಡೆ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನವಿರುವ ಹಿನ್ನೆಲೆಯಲ್ಲಿ, ಅವರಿಗೆ ಶುಭಾಶಯ ಕೋರುವ ನೆಪದಲ್ಲಿ ಹಲವು ಶಾಸಕರು ಹೈಕಮಾಂಡ್ ನಾಯಕರ ಗಮನ ಸೆಳೆಯಲು ಹಸ್ತಿನಾವತಿಗೆ ಧಾವಿಸಿದ್ದಾರೆ.


