ಉಡುಪಿ: ರಾಜ್ಯದಲ್ಲಿರುವ ಪಡಿತರ ಚೀಟಿಗಳ ಪೈಕಿ ಸುಮಾರು 7.59 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ.
ಅದರಂತೆ ಇದುವರೆಗೆ ಸುಮಾರು 4 ಲಕ್ಷ ಕಾರ್ಡ್ಗಳನ್ನು ರಾಜ್ಯದಲ್ಲಿ ರದ್ದು ಮಾಡಲಾಗಿದ್ದು, ಉಳಿದ 3.59 ಲಕ್ಷ ಕಾರ್ಡ್ಗಳ ರದ್ದತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿರುವುದಾಗಿ ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಉಡುಪಿಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಾಕಿ ಉಳಿದ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸುವ ಮುನ್ನ ಪರಿಶೀಲನೆ ನಡೆಸುವ ಅಗತ್ಯವಿದೆ.
ಸದ್ಯಕ್ಕೆ ಯಾವುದೇ ಬಿಪಿಎಲ್ ಕಾರ್ಡ್ ರದ್ದುಗೊಳಿಸದಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದ್ದಾರೆ.
ಪಡಿತರ ಚೀಟಿಗಳ ಇ-ಕೆವೈಸಿ ಮಾಡಿ ಐದು ವರ್ಷವಾಗಿದ್ದು, ರಾಜ್ಯದಲ್ಲಿರುವ ಎಲ್ಲಾ 2.59 ಕೋಟಿ ಪಡಿತರ ಕಾರ್ಡ್ ಗಳ ಮರು ಇ-ಕೆವೈಸಿ ಮಾಡುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಕಾರ್ಡ್ ದಾರರು ಮರಣ ಹೊಂದಿದ್ದರೆ, ಬಡತನ ರೇಖೆಯಿಂದ ಮೇಲೆ ಬಂದಿದ್ದರೆ ಅಥವಾ ಕಾರ್ಡ್ ಅಗತ್ಯ ಇಲ್ಲದೆ ಇರುವವರಿದ್ದರೆ ಅವರ ಡಾಟಾ ಕೆವೈಸಿ ಮೂಲಕ ಲಭ್ಯವಾಗಲಿದೆ.
ಈ ಮಾಹಿತಿಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮರು ಕೆವೈಸಿ ಮಾಡಿಸಿಕೊಳ್ಳಲು ಸೆ.30ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.


