ನವದೆಹಲಿ: ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ಸೂಚಿಸಿದ್ದ ಸುಪ್ರೀಂಕೋರ್ಟ್ ಆದೇಶ ತಿದ್ದುಪಡಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ.
ಸುಪ್ರೀಂಕೋರ್ಟ್ನ ರಿಜಿಸ್ಟ್ರಾರ್ ಅವರಿಂದಲೇ ಅರ್ಜಿ ತಿರಸ್ಕೃತಗೊಂಡಿದೆ. ವಿಚಾರಣೆಗೆ ಅರ್ಹವಲ್ಲದ ಅರ್ಜಿ ಎಂದು ರಿಜಿಸ್ಟ್ರಾರ್ ಕಾರಣ ನೀಡಿದ್ದು, ವಿಚಾರಣೆಗೆ ಪಟ್ಟಿ ಮಾಡಲು ಸಾಧ್ಯವಿಲ್ಲ ಎಂದು ವಕೀಲರಿಗೆ ಮಾಹಿತಿ ನೀಡಿದ್ದಾರೆ.
ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಈ ಆದೇಶವನ್ನು ಮಾರ್ಪಾಡು ಮಾಡಲು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಜಾಮೀನು ಕೋರಲು ಅವಕಾಶ ನೀಡಲು ದರ್ಶನ್ ಮನವಿ ಮಾಡಿದ್ದರು.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಮೇ 16ರಂದು ಜಾಮೀನು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಶುಕ್ರವಾರ ನಿರ್ದೇಶನ ನೀಡಿತ್ತು.
ವಿಚಾರಣಾ ನ್ಯಾಯಾಲಯ ದಿನನಿತ್ಯ ಸಾಕ್ಷಿಗಳ ವಿಚಾರಣೆ ನಡೆಸಿ ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ಬಳಿಕ ದರ್ಶನ್ ಅವರು ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸೂಚನೆ ನೀಡಿತ್ತು. ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನನ್ನು ನ್ಯಾಯಪೀಠ 2025ರ ಆಗಸ್ಟ್ 14ರಂದು ರದ್ದುಗೊಳಿಸಿತ್ತು.


