ಛತ್ರಪತಿ ಸಂಭಾಜಿನಗರ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಯಶ್ವಾಡಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಗರ್ಭಗುಡಿ ಮುಂಭಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಭಾ ಮಂಟಪದ ಚಾವಣಿ ಕುಸಿದು ಕನಿಷ್ಠ ಐವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಭಕ್ತರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಯಶ್ವಾಡಿ ಗ್ರಾಮವು ಛತ್ರಪತಿ ಸಂಭಾಜಿನಗರ ಜಿಲ್ಲಾ ಕೇಂದ್ರದಿಂದ 190 ಕಿ.ಮೀ ದೂರದಲ್ಲಿದೆ. ಶನಿವಾರವಾದ್ದರಿಂದ ಆಂಜನೇಯ ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.
ಘಟನೆ ನಡೆದಾಗ ಕೆಲವು ಭಕ್ತರು ಈ ಚಾವಣಿಯ ಕೆಳಗೆ ನಿಂತಿದ್ದರು. ಇದುವರೆಗೆ 25 ಭಕ್ತರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಬಹುದು ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
'ಗಾಯಾಳುಗಳನ್ನು ಪರ್ಭಾನಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
'ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಲಾಗಿದೆ' ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.


