ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಅಜ್ಜಯ್ಯನ ಹೆಸರಿನಲ್ಲಿ ಕೈಗೊಂಡಿದ್ದಂತ ಸಿಎಂ ಡಿ.ಕೆ ಶಿವಕುಮಾರ್ ಅವರು, ಅವರ ಅಧಿಕೃತ ನಿವಾಸ ಕೃಷ್ಣಾದಲ್ಲೂ ಅಜ್ಜಯ್ಯನ ಪೋಟೋ ಇರಿಸಿ ವಿಶೇಷ ಪೂಜೆ ಸಲ್ಲಿಸಿ ಗಮನ ಸೆಳೆದಿದ್ದಾರೆ. ಜೊತೆಗೆ ತಮ್ಮ ಕಚೇರಿಯಲ್ಲೂ ಅಜ್ಜಯನ್ನ ಪೋಟೋ ಇರಿಸಿರೋದು ಕಂಡು ಬಂದಿದೆ.
ರಾಜ್ಯ ರಾಜಕಾರಣದಲ್ಲಿ ಮಹತ್ವದ ನಡೆ ಎಂಬಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರದಂದು ಬೆಂಗಳೂರಿನ ಕುಮಾರಪಾರ್ಕ್ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ 'ಕೃಷ್ಣಾ'ದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಅಧಿಕೃತ ಕಾರ್ಯಾರಂಭ ಮಾಡಿದರು.
ಇಂದು ಬೆಳಗ್ಗೆ ಗೃಹಕಚೇರಿಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಆತ್ಮೀಯವಾಗಿ ಬರಮಾಡಿಕೊಂಡರು.
ಬಳಿಕ ಕಚೇರಿ ಆವರಣದಲ್ಲಿ ಧಾರ್ಮಿಕ ವಿಧಿ-ವಿಧಾನಗಳ ಪ್ರಕಾರ ಪೂಜೆ ನೆರವೇರಿಸಿದ ಡಿ.ಕೆ. ಶಿವಕುಮಾರ್ ಅವರು, ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅಧಿಕೃತವಾಗಿ ಮುಖ್ಯಮಂತ್ರಿಗಳ ಗೃಹಕಚೇರಿಯ ಜವಾಬ್ದಾರಿ ವಹಿಸಿಕೊಂಡರು.
ಮುಖ್ಯಮಂತ್ರಿಗಳು ಇನ್ಮುಂದೆ 'ಕೃಷ್ಣಾ' ಗೃಹಕಚೇರಿಯಿಂದಲೇ ಸರ್ಕಾರದ ಪ್ರಮುಖ ಆಡಳಿತಾತ್ಮಕ ಸಭೆಗಳನ್ನು ನಡೆಸಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲು ಈ ಕಚೇರಿಯನ್ನು ಬಳಸಲಿದ್ದಾರೆ.
ಪೂಜಾ ಕಾರ್ಯಕ್ರಮದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, "ರಾಜ್ಯದ ಜನತೆಯ ಹಿತರಕ್ಷಣೆ ಮತ್ತು ಆಡಳಿತಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಇಂದಿನಿಂದ ಗೃಹಕಚೇರಿಯಲ್ಲಿ ಕಾರ್ಯಾರಂಭ ಮಾಡಲಾಗಿದೆ," ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖ ರಾಜಕೀಯ ಮುಖಂಡರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.


