ಮಾನ್ವಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಲ್ಯಾಣ ಕರ್ನಾಟಕ ಉತ್ಸವವನ್ನು ಪ್ರತಿಯೊಬ್ಬರೂ ವಿಜೃಂಭಣೆಯಿಂದ ಆಚರಿಸಬೇಕು ಎಂದು ವಿಶ್ವ ಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಓಂ ಮಂಡಳಿ ಶಿವಶಕ್ತಿ ಸೇವಾ ಸಂಸ್ಥಾನದ ಮಾನ್ವಿ ಶಾಖೆಯ ಸಂಚಾಲಕರಾದ ಅಕ್ಕಮ್ಮನವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರತಿಯೊಬ್ಬರೂ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಶಿಕ್ಷಕಿ ಶಾರದಾ ವಿಶ್ವಕರ್ಮ ಮಾತನಾಡಿ, ವಿಶ್ವಕರ್ಮರು ವಿಶ್ವಕರ್ಮ ಸಮಾಜದ ಗುರುಗಳಾಗಿದ್ದು, ದೇವ ಶಿಲ್ಪಿಗಳಾಗಿ ಅವರು ಮಾಡಿದ ಮಹತ್ವದ ಕಾರ್ಯಗಳನ್ನು ಸ್ಮರಿಸಿದರು. ಶಿಕ್ಷಕಿ ಅಂಬುಜಾ ಅವರು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸರ್ಕಾರದಿಂದ ದೊರೆತಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಈ ಸೌಲಭ್ಯಗಳನ್ನು ಅರ್ಹರು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.
ತಾಲೂಕು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಸುವರ್ಣ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಶಿಕ್ಷಕಿ ಸುವರ್ಣ ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕಿ ಆಯಿಷಾ ಸ್ವಾಗತಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಗೀತಾ ಹಿರೇಮಠ ಹಾಗೂ ಸಂಸ್ಥಾಪಕ ಅಧ್ಯಕ್ಷ ಎಂ.ಎಂ. ಹಿರೇಮಠ ಉಪಸ್ಥಿತರಿದ್ದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕಿ ಬೂಷಿರಾ ವಂದಿಸಿದರು.
ವರದಿ : ಆಂಜನೇಯ ನಸಲಾಪುರ


