ಬೆಳಗಾವಿ: ಸತೀಶ್ ಜಾರಕಿಹೊಳಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಬೆಳಗಾವಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ.
“ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ಧ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಿದ್ದಾರೆ” ಎಂಬ ಗಂಭೀರ ಆರೋಪ ಮಾಡಲಾಗಿದೆ. ಆದರೆ ಈ ಆರೋಪವನ್ನು ಸ್ವತಃ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ.
ಹೀಗಾಗಿ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಇಲ್ಲಸಲ್ಲದ ಅಪವಾದ ಹೊರಿಸಿ ಅವರ ಹೆಸರು ಹಾಳು ಮಾಡಲು ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮುಖ್ಯವಾಗಿ ಕುರುಬ ಜನಾಂಗ ಮತ್ತು ವಾಲ್ಮೀಕಿ ಜನಾಂಗದ ನಡುವೆ ಭಿನ್ನಾಭಿಪ್ರಾಯ ಉಂಟುಮಾಡಿ ಸಾರ್ವಜನಿಕರಲ್ಲಿ ಶಾಂತಿಭಂಗ ಮತ್ತು ದೊಂಬಿ ಉಂಟು ಮಾಡುವ ಉದ್ದೇಶದಿಂದ ಸುಳ್ಳು ಸುದ್ದಿಗಳನ್ನು ಸತೀಶ್ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ.
ಶೀಘ್ರವೇ ಸುಳ್ಳು ಸುದ್ದಿ ಹರಡಿಸುವವರ ಹಾಗೂ ಈ ಎರಡು ನಕಲಿ ಫೇಸ್ ಬುಕ್ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಠಾಣೆಗೆ ರಾಜಶೇಖರ ತಳವಾರ ದೂರು ನೀಡಿದ್ದಾರೆ.

